ಆನೇಕಲ್: ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದ ರಕ್ಷಣೆಗಾಗಿ ಒಗ್ಗೂಡಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಯುವಕರಿಗೆ, ವಿದ್ಯಾರ್ಥಿಗಳಿಗೆ ಅವರ ಚಿಂತನೆಗಳ ಪುಸ್ತಕಗಳನ್ನು ವಿತರಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಬಿಎಸ್ಪಿ ತಾಲ್ಲೂಕು ಘಟಕದ ಅಧ್ಯಕ್ಷ ಚಿನ್ನಪ್ಪ.ವೈ.ಚಿಕ್ಕಹಾಗಡೆ ತಿಳಿಸಿದರು.
ಅವರು ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಬಿಎಸ್ಪಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನದಲ್ಲಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಸಮಾಜವನ್ನು ಸೃಷ್ಟಿ ಮಾಡಬೇಕೆಂಬ ದೃಷ್ಟಿಯಿಂದ ಸಂವಿಧಾನದಲ್ಲಿ ಜಾತ್ಯತೀತತೆ, ಸಮಾನತೆಯ ತತ್ವಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಈ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು ಇವುಗಳ ಬಲವರ್ಧನೆಗೆ ಎಲ್ಲರೂ ಶ್ರಮಿಸಬೇಕಾಗಿದೆ. ಎಲ್ಲ ಶೋಷಿತರ ಹಾಗೂ ಎಲ್ಲ ವರ್ಗಗಳ ದನಿಯಾಗಿ ಸಮಾಜದಲ್ಲಿ ಸಮಾನತೆಯನ್ನು ತರಲು ಶ್ರಮಿಸಿದ ಅಂಬೇಡ್ಕರ್ ಅವರು ಮಹಾನ್ ಚೇತನ ಎಂದರು.
ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಲ್.ಮುನಿಯಲ್ಲಪ್ಪ, ತಾಲ್ಲೂಕು ಉಸ್ತುವಾರಿ ಶಂಭಪ್ಪ, ಮುದ್ದುಕೃಷ್ಣ, ಪ್ರಧಾನ ಕಾರ್ಯದರ್ಶಿ ಮುನೀರ್ ಭಾಷ, ಮುಖಂಡರಾದ ಕುಮಾರ್, ಷಣ್ಮುಗ, ವಿನ್ಸಂಟ್ ಪ್ರಭಾಕರ್, ಸೋಮಶೇಖರ್ ಹಾಜರಿದ್ದರು.