ದೇವನಹಳ್ಳಿ: ಕೊರೊನಾಸೋಂಕು ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿರುವ ವ್ಯಕ್ತಿಗಳು ಜವಾಬ್ದಾರಿ ಮರೆತು ಓಡಾಡುತ್ತಿದ್ದಾರೆ.ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ವಿಪತ್ತು ನಿರ್ವಾಹಣಾ ಕಾಯ್ದೆ-2005ರ ಅಡಿ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯಕ್ ಎಚ್ಚರಿಸಿದ್ದಾರೆ.
ಹೋಂ ಕ್ವಾರಂಟೈನ್ನಲ್ಲಿ ಇರುವವರು ಅವಧಿ ಮುಗಿಯುವವರೆಗೂ ಸರ್ಕಾರಿ ಆದೇಶ ಪಾಲನೆ ಮಾಡಬೇಕು. ಹೋಂ ಕ್ವಾರಂಟೈನ್ನಲ್ಲಿರುವವರ ಮೇಲೆ ನಿಗಾ ವಹಿಸಲು ಮೊಬೈಲ್ ಆ್ಯಪ್ ಮೂಲಕ ಮಾಹಿತಿ ದಾಖಲಿಸಲಾಗುತ್ತಿದೆ. ಇವರು ನಿಯಮ ಉಲ್ಲಂಘಿಸಿದಲ್ಲಿ ಹಾಗೂ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕ್ವಾರಂಟೈನ್ ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸುತ್ತಾಡುವುದು ಕಂಡುಬಂದಲ್ಲಿ ಜಿಲ್ಲಾಧಿಕಾರಿಯವರ ಕಚೇರಿ, ಉಪ ವಿಭಾಗಾಧಿಕಾರಿಯವರ ಕಚೇರಿ, ತಹಶೀಲ್ದಾರ್ ಕಚೇರಿ ಹಾಗೂ ಸಮೀಪದ ಪೊಲೀಸ್ ಠಾಣೆಗಳಲ್ಲಿ ನಾಗರಿಕರು ಮಾಹಿತಿ ನೀಡುವ ಮೂಲಕ ಸೋಂಕು ತಡೆಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.