ಆನೇಕಲ್: ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ಅವಶ್ಯಕತೆಯಿದೆ. ಐಟಿ ಕಂಪನಿಗಳ ಉದ್ಯೋಗಿಗಳು ತಮ್ಮ ರಜೆ ದಿನಗಳಲ್ಲಿ ಬಿಜೆಪಿ ಹಾಗೂ ದೇಶಕ್ಕಾಗಿ ದುಡಿಯಬೇಕು. ಈ ನಿಟ್ಟಿನಲ್ಲಿ ಯುವ ಸಮುದಾಯವು ಸದೃಢ ದೇಶಕ್ಕಾಗಿ ಬಿಜೆಪಿ ಬೆಂಬಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.
ತಾಲ್ಲೂಕಿನ ಚಂಬೇನಹಳ್ಳಿಯಲ್ಲಿ ಸರ್ಜಾಪುರ ಸಿಟಿಜನ್ ಫೋರಂ ವತಿಯಿಂದ ಆಯೋಜಿಸಿದ್ದ ಸಂವಾದ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ರಾಜಕೀಯ ಕ್ಷೇತ್ರದಲ್ಲಿ ಸೇವೆ ವಿಸ್ತರಿಸುವ ಅಭಿಲಾಷೆಯಿಂದ ರಾಜಕೀಯ ಪ್ರವೇಶ ಮಾಡಿದ್ದೇನೆ. ಸರ್ಕಾರಿ ಆಸ್ಪತ್ರೆಯನ್ನು ಹೈಟೆಕ್ ಆಸ್ಪತ್ರೆಯನ್ನಾಗಿ ಮಾಡಿದ ಅನುಭವವಿದೆ. ಈ ಅನುಭವ ಮತ್ತು ಜ್ಞಾನವನ್ನು ಬಳಸಿ ದೇಶದಲ್ಲಿ ಉತ್ತಮ ಆರೋಗ್ಯ ಸೌಲಭ್ಯವನ್ನು ಕಲ್ಪಿಸುವ ಮೂಲಕ ಜನಸೇವೆ ಮಾಡಬೇಕು’ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ಮೂಲಸೌಲಭ್ಯ, ಕೈಗಾರಿಕೆಗಳ ಅಭಿವೃದ್ಧಿಯ ದೃಷ್ಠಿಕೋನ ಹೊಂದಲಾಗಿದ್ದು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.
ನಮೋ ಬ್ರಿಗೇಡ್ನ ಸೂಲಿಬೆಲೆ ಚಕ್ರವರ್ತಿ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಗೋಪಿನಾಥರೆಡ್ಡಿ, ಮುಖಂಡರಾದ ಟಿ.ವಿ.ಬಾಬು, ಹುಲ್ಲಹಳ್ಳಿ ಶ್ರೀನಿವಾಸ್, ರಾಧಾಕೃಷ್ಣ, ಕೆ.ವಿ.ಶಿವಪ್ಪ, ನಿತಿನ್ ಜಯಣ್ಣ, ಲಕ್ಷ್ಮೀನಾರಾಯಣ್, ರಾಜಶೇಖರರೆಡ್ಡಿ, ಭರತ್ ಗೌಡ ಇದ್ದರು.