ಆನೇಕಲ್ : ತಾಲ್ಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಣವಾರ ಗ್ರಾಮದಲ್ಲಿ ಗುರುವಾರ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಆಹಾರ ಅರಸಿ ಕಾಡಿನಿಂದ ನಾಡಿನತ್ತ ಬಂದಿರುವ ಕಾಡಾನೆಗಳ ಹಿಂಡು 15 ದಿನಗಳಿಂದ ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಣಿಸಿಕೊಂಡು ರೈತರು ಬೆಳೆದಿರುವ ಬೆಳೆಯನ್ನು ನಾಶಮಾಡಿವೆ.
ಗುರುವಾರ ಮುಂಜಾನೆ ಸುಣವಾರ ಗ್ರಾಮದ ಬಳಿ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿದ್ದು ಈ ಭಾಗದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಾಡಾನೆಗಳನ್ನು ಕಾಡಿನತ್ತ ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಪಟಾಕಿ ಸಿಡಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಾಗಿ ಕೊಯ್ಲಿನ ಸಂದರ್ಭದಲ್ಲಿ ಕಾಡಾನೆಗಳ ಹಾವಳಿ ಸಾಮಾನ್ಯ. ಆದರೆ ಈ ವರ್ಷ ಕಳೆದ ಕಾಡಂಚಿನ ಗ್ರಾಮಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು ಇದರಿಂದಾಗಿ ಬೆಳೆ ನಷ್ಟ ಉಂಟಾಗುತ್ತಿದೆ. ಕಾಡಾನೆಗಳ ಹಾವಳಿ ಯನ್ನು ತಪ್ಪಿಸಬೇಕೆಂಬು ಗ್ರಾಮಸ್ಥರ ಒತ್ತಾಯವಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದರೂ ಪ್ರತಿದಿನ ಒಂದಿಲ್ಲೊಂದು ಗ್ರಾಮಗಳಲ್ಲಿ ಪ್ರತ್ಯಕ್ಷವಾಗುತ್ತಿದೆ. ಸಿಬ್ಬಂದಿಯ ಯಾವುದೇ ಕಾರ್ಯಾಚರಣೆಗೆ ಜಗ್ಗದೆ ಆನೆಗಳು ಜನರ ನಿದ್ದೆಗೆಡಿಸಿವೆ.