ಆನೇಕಲ್ : ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಮತ್ತು ಜೈವಿಕ ಉದ್ಯಾನವನದಿಂದ ವಿಶ್ವ ವನ್ಯಜೀವಿ ದಿನ ಆಚರಿಸಲಾಯಿತು.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ್ ಪ್ರಿಯದರ್ಶಿನಿ ಮಾತನಾಡಿ, ಪರಿಸರ ಸಮತೋಲನದಿಂದ ಇರಬೇಕಾದರೆ ವನ್ಯಜೀವಿಗಳ ಪಾತ್ರ ಪ್ರಮುಖವಾದುದ್ದು. ಹೀಗಾಗಿ ವನ್ಯಜೀವಿಗಳ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಯುವ ಸಮುದಾಯಕ್ಕೆ ವನ್ಯಜೀವಿಗಳ ಬಗ್ಗೆ ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ವಿವಿಧ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿದೆ. ಮಾನವ ಮತ್ತು ವನ್ಯ ಪ್ರಾಣಿಗಳ ನಡುವಿನ ಸಂಘರ್ಷ ತಡೆಯಲು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಉದ್ಯಾನದ ವ್ಯಾಪ್ತಿಯಲ್ಲಿ ಉನ್ನತ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾನೂನು ನೆರವು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ನಿವೃತ್ತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಕೆ.ಸಿಂಗ್, ಆನೇಕಲ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ವನಿತಾ, ಸರ್ಕಾರಿ ಅಭಿಯೋಜಕಿ ಶಾಲಿನಿ, ಕಾನೂನು ಪ್ರಾಧಿಕಾರದ ಸದಸ್ಯೆ ಭಾಗ್ಯಶ್ರೀ ಮುನಿರಾಜು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಎಸಿಎಫ್ ವಿಶಾಲ್ ಪಾಟೀಲ್ ಇದ್ದರು.