ದೊಡ್ಡಬಳ್ಳಾಪುರ: ವಿಧಾನ ಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ.ಪಿ.ರಂಗನಾಥ್ ಅವರ ಪರ ಪ್ರಚಾರ ನಡೆಯಿತು.
ನಿವೃತ್ತ ಶಿಕ್ಷಕ ರಾಮಚಂದ್ರಪ್ಪ ಮಾತನಾಡಿ, ‘ರಾಜ್ಯದಲ್ಲಿ ಶಿಕ್ಷಕರ ಪರವಾದ ಕಾನೂನುಗಳು ಹಾಗೂ ಶಿಕ್ಷಕರ ನೇಮಕಾತಿಯಲ್ಲಿ ಪಾರದರ್ಶಕತೆ ಜಾರಿಗೆ ಬಂದಿದ್ದೇ ಜೆಡಿಎಸ್ ಆಡಳಿತದ ಅವಧಿಯಲ್ಲಿ. ಯಾರು ಅಧಿಕಾರದಲ್ಲಿ ಇದ್ದಾಗ ನಮ್ಮ ಪರವಾದ ಏನು ಕೆಲಸಗಳೂ ಅಗಿವೆ ಎನ್ನುವುದನ್ನು ಸುಶಿಕ್ಷಿತರಾಗಿರುವ ಎಲ್ಲಾ ಶಿಕ್ಷಕರಿಗೂ ತಿಳಿದಿದೆ’ ಎಂದರು.
‘ಶಿಕ್ಷಕರ ಸಮಸ್ಯೆಗಳು ಬಗೆಹರಿಯಲು ವಿದ್ಯಾವಂತ ಸಮುದಾಯದ ಅಭ್ಯರ್ಥಿಗಳೇ ಆಯ್ಕೆಯಾಗಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಎ.ಪಿ.ರಂಗನಾಥ್ ಅವರು ಒಳ್ಳೆಯ ಹೆಸರು ಪಡೆದಿದ್ದಾರೆ. ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡಿದರೆ ವಿಧಾನ ಪರಿಷತ್ನಲ್ಲೂ ಸಹ ಶಿಕ್ಷಕರ ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ಮಾಡಲು ಎಲ್ಲಾ ಅರ್ಹತೆಗಳನ್ನು ಹೊಂದಿದ್ದಾರೆ. ಈ ಬಾರಿ ಹಲವಾರು ಜನ ಶಿಕ್ಷಕರು ಹೊಸಬರಿಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಎ.ಪಿ.ರಂಗನಾಥ್ ಅವರ ಪರವಾಗಿ ಹಲವಾರು ಜನ ಶಿಕ್ಷಕರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದರು.
ಶಾಲೆಗಳಿಗೆ ಭೇಟಿ ನೀಡಿ ಮತಯಾಚನೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಡ್ಡರಹಳ್ಳಿರವಿ, ಕಾರ್ಯಾಧ್ಯಕ್ಷ ಆರ್.ಕೆಂಪರಾಜ್, ಜೆಡಿಎಸ್ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಅಂಜನೇಗೌಡ, ರಾಮಣ್ಣಗೌಡ ಹಾಜರಿದ್ದರು.