ದೊಡ್ಡಬಳ್ಳಾಪುರ: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ, ವಿದ್ಯುತ್ ಖಾಸಗೀಕರಣ, ಕಾರ್ಮಿಕ ಕಾಯ್ದೆ ತಿದ್ದುಪಡಿ ಜಾರಿ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಸೆ.28ರ ಬಂದ್ಗೆ ಬೆಂಬಲಿಸಿ ತಾಲ್ಲೂಕಿನ ಕನ್ನಡಪರ ಸಂಘಟನೆಗಳು, ರೈತ, ಕಾರ್ಮಿಕ, ದಲಿತ ಸಂಘಟನೆಗಳ ಒಕ್ಕೂಟದಿಂದ ದೊಡ್ಡಬಳ್ಳಾಪುರ ಬಂದ್ ಆಚರಿಸಲು ಸಿದ್ದತೆಗಳನ್ನು ನಡೆಸಿದ್ದು, ಬಂದ್ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ರೈತ, ಕಾರ್ಮಿಕ, ದಲಿತ, ಕನ್ನಡಪರ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ‘ಸೆ.28ರಂದು ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ. ಜನರಿಗೆ ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಅರಿವು ಮೂಡಿಸಿ, ಬಂದ್ ಯಶಸ್ವಿಗೊಳಿಸಲು ಮನವಿ ಮಾಡಲಾಗುವುದು. ಈ ಕುರಿತು ಆಟೋ ಪ್ರಚಾರ ಕೈಗೊಳ್ಳಲಾಗುವುದು’ ಎಂದರು.
ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಟಿ.ಎನ್.ಪ್ರಭುದೇವ್, ‘ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಮಾತನಾಡಿ, ಈ ಹೋರಾಟ ಮಾಡುವುದು ಅನಿವಾರ್ಯ.ಅಂದು ಬೆಳಿಗ್ಗೆ 7 ಗಂಟೆಯಿಂದ ಬೈಕ್ ರ್ಯಾಲಿ ಮಾಡಲಾಗುವುದು. ಆ ನಂತರ ನೆಲದಾಂಜನೇಯಸ್ವಾಮಿ ದೇವಾಲಯದ ಡಾ.ರಾಜ್ಕುಮಾರ್ ವೃತ್ತದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ಆಗಮಿಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸತೀಶ್, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ವಸಂತ್ ಕುಮಾರ್, ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ರಾಮಕೃಷ್ಣ, ಮುಖಂಡ ವಿಜಯಕುಮಾರ್, ಸಿಐಟಿಯು ಮುಖಂಡ ರೇಣುಕಾರಾಧ್ಯ, ಆರ್.ಕೆಂಪರಾಜ್, ಕನ್ನಡ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ರಾಜ್ಯ ರೈತ ತಾಲ್ಲೂಕು ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಶಿವರಾಜ್ಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಾಜು ಸಣ್ಣಕ್ಕಿ, ಕರವೇ ತಾಲ್ಲೂಕು ಗೌರವ ಅಧ್ಯಕ್ಷ ಪು.ಮಹೇಶ್, ಅಗ್ನಿ ವೆಂಕಟೇಶ್, ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಚರಣ್ರಾಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.