ವಿಜಯಪುರ: ಹಾಲು ಉತ್ಪಾದಕರ ಪ್ರಾಮಾಣಿಕತೆ ಜೆತೆಗೆಗುಣಮಟ್ಟದ ಹಾಲು ಪೂರೈಕೆಯಿಂದಾಗಿ ಸಹಕಾರಿ ಸಂಘಗಳು ಹೆಚ್ಚು ಲಾಭಗಳಿಸಲು ಅನುಕೂಲವಾಗಲಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ಚನ್ನರಾಯಪಟ್ಟಣ ಹೋಬಳಿ ನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಿಶಿನಕುಂಟೆ ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶಗಳಲ್ಲಿನ ಜನರಿಗೆ ಸ್ವಯಂ ಉದ್ಯೋಗಾವಕಾಶವನ್ನು ಒದಗಿಸಿಕೊಟ್ಟಿರುವ ಹೈನೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡಬೇಕಾಗಿದೆ ಎಂದರು.
ಬಮೂಲ್ ಉಪಾಧ್ಯಕ್ಷ ಇರಿಗೇನಹಳ್ಳಿ ಶ್ರೀನಿವಾಸ್ ಮಾತನಾಡಿ, ಒಬ್ಬರಿಗೊಬ್ಬರು ಸಹಕಾರ ಮಾಡಿಕೊಂಡು ಬದುಕು ಕಟ್ಟಿಕೊಳ್ಳುವುದೇ ಸಹಕಾರಿ ಸಂಘಗಳ ಮೂಲ ಉದ್ದೇಶ. ಇದಕ್ಕಾಗಿ ಅನೇಕ ಸೌಲಭ್ಯಗಳನ್ನು ಬಮೂಲ್ನಿಂದ ಒದಗಿಸಲಾಗುತ್ತಿದೆ. ಈ ಎಲ್ಲಾ ಸೌಲಭ್ಯಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇಹೈನೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ಮಳೆಯ ಕೊರತೆ, ಮೇವುಗಳ ಕೊರತೆಯ ನಡುವೆಯು ಹಾಲಿನ ಗುಣಮಟ್ಟ ಹಾಗೂ ಉತ್ಪಾದನೆಯ ಪ್ರಮಾಣವನ್ನು ಕಾಪಾಡಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ ಮಾತನಾಡಿ, ಸಹಕಾರಿ ಸಂಘಗಳ ಮೂಲಕ ಯಶಸ್ವಿನಿ ಕಾರ್ಡ್ ನೀಡುತ್ತಿದ್ದರು. ಆಗ ರೈತರಿಗೆ ಸಾಕಷ್ಟು ಅನುಕೂಲವಾಗುತ್ತಿತ್ತು. ಈಗ ಸರ್ಕಾರ ಯಶಸ್ವಿನಿ ಕಾರ್ಡುಗಳನ್ನು ನಿಲ್ಲಿಸಿರುವುದರಿಂದ ತೊಂದರೆಯಾಗುತ್ತಿದೆ. ಆರೋಗ್ಯ ಕರ್ನಾಟಕ ಯೋಜನೆಯಡಿ ನೀಡುತ್ತಿರುವ ಆರೋಗ್ಯ ಕಾರ್ಡುಗಳ ಬಗ್ಗೆ ಆರೋಗ್ಯ ಇಲಾಖೆಯವರು ಮಾಹಿತಿ ಒದಗಿಸಬೇಕು. ಬಮೂಲ್ ವತಿಯಿಂದ ಕನಿಷ್ಠ ಎರಡು ತಿಂಗಳಿಗೊಮ್ಮೆ ಸಹಕಾರಿ ಸಂಘಗಳಲ್ಲಿ ಉತ್ಪಾದಕರಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು ಎಂದರು.
ನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಮ್ಮ, ಎಪಿಎಂಸಿ ಅಧ್ಯಕ್ಷ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯ ಸೋಮತ್ತನಹಳ್ಳಿ ಮಂಜುನಾಥ್, ಸಹಕಾರಿ ಸಂಘದ ಪದಾಧಿಕಾರಿಗಳು ಇದ್ದರು.