ದೇವನಹಳ್ಳಿ: ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತರ ಸೇವೆ ಅನನ್ಯವಾದುದು ಎಂದು ಶಾಸಕ ನಿಸರ್ಗನಾರಾಯಣಸ್ವಾಮಿ ಹೇಳಿದರು .
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಸೋಂಕಿನಿಂದ ಗುಣಮುಖರಾದ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣೆ ಮತ್ತು ಎಲ್ಲ ಆಶಾ ಕಾರ್ಯಕರ್ತೆಯರಿಗೆ ಸಮವಸ್ತ್ರ ಮತ್ತು ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಮನೆಗೆ ತೆರಳಿ ಆರೋಗ್ಯ ವಿಚಾರಣೆ ನಡೆಸುತ್ತಿರುವ 143 ಆಶಾ ಕಾರ್ಯಕರ್ತೆಯರನ್ನು ಈ ಮೊದಲೇ ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತು. ವಿವಿಧ ಕಾರಣಗಳಿಂದ ಮುಂದೂಡಿ ಇದೀಗ ನಡೆಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಜರ್ ನೀಡಿಲ್ಲ ಎಂದು ದೂರುಗಳು ಬಂದಿವೆ. ಕಡಿಮೆ ವೇತನದಲ್ಲಿ ದುಡಿಸಿಕೊಳ್ಳತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಲ್ಲ ರೀತಿಯ ಸೌಲಭ್ಯ ನೀಡಬೇಕಿತ್ತು. ಸಂಕಷ್ಟದಲ್ಲಿರುವ ಬಡವರ ಸೇವೆಗಾಗಿಯೇ ಮೀಸಲಿರುವ ಕಾರ್ಯಕರ್ತೆಯರನ್ನು ಎಂದೆಂದಿಗೂ ನಿರ್ಲಕ್ಷ್ಯ ಮಾಡಬಾರದು ಎಂದು ಹೇಳಿದರು .
ಸಮವಸ್ತ್ರ, ದಿನಸಿ ಕಿಟ್ ಮತ್ತು ಮೂವರು ಕಾರ್ಯಕರ್ತೆಯರಿಗೆ ತಲಾ ₹ 10 ಸಾವಿರದ ಚೆಕ್ ನೀಡುತ್ತಿದ್ದೇನೆ. ಸಮಸ್ಯೆಗಳ ನಿವಾರಣೆಗೆ ಬದ್ಧವಾಗಿದ್ದೇನೆ ಎಂದು ಹೇಳಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್ ಮಾತನಾಡಿದರು. ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ಪುರಸಭೆ ಸದಸ್ಯರಾದ ರವೀಂದ್ರ, ಪುಷ್ಪ ಲಕ್ಷ್ಮೀನಾರಾಯಣ, ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಎ.ಸಿ.ನಾಗರಾಜ್, ಮುಖಂಡರಾದ ಚಿಕ್ಕನಾರಾಯಣಸ್ವಾಮಿ, ಮುನಿನಂಜಪ್ಪ, ಹಿರಿಯ ಆರೋಗ್ಯಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.