ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ವಕ್ತಾರ ಹಾಗು ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್ ನಾರಾಯಣ ಗೌಡ ಕಣಕ್ಕೆ ಇಳಿಯಲಿದ್ದಾರೆ.
ಬಿಜೆಪಿ ಹೈಕಮಾಂಡ್ ಸೋಮವಾರ ತಡರಾತ್ರಿ ಅಭ್ಯರ್ಥಿ ಹೆಸರು ಪ್ರಕಟಿಸಿದ್ದು, ಕ್ಷೇತ್ರದ ಕಾರ್ಯಕರ್ತರಿಗೆ ಅಚ್ಚರಿ ನೀಡಿದೆ.
ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳಾಗಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್, ಅವರ ಪುತ್ರಿ ನಿಶಾ ಹಾಗೂ ಪಕ್ಷದ ರಾಮನಗರ ಜಿಲ್ಲಾ ಘಟಕದ ಅಧ್ಯಕ್ಷ ಎಂ. ರುದ್ರೇಶ್ ಹೆಸರುಗಳು ಹೆಚ್ಚು ಚಾಲ್ತಿಯಲ್ಲಿದ್ದವು.
ಅಶ್ವಥ್ ನಾರಾಯಣ ಅವರ ಹೆಸರು ಚುನಾವಣೆಯ ಆರಂಭದಲ್ಲಿಯೇ ಮುನ್ನಲೆಗೆ ಬಂದಿತ್ತು. ಆದರೆ ಯೋಗೇಶ್ವರ್ ಹೆಸರು ಕೇಳಿಬರುತ್ತಲೇ ಹಿನ್ನಲೆಗೆ ಸರಿದಿತ್ತು.
ಬಿಜೆಪಿ ಅಭ್ಯರ್ಥಿಯು ಮಧ್ಯಾಹ್ನ 1.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಕಾರ್ಯಕರ್ತ ರೊಂದಿಗೆ ಮೆರವಣಿಗೆ ನಡೆಸಲಿದ್ದಾರೆ.
ಸುರೇಶ್ ನಾಮಪತ್ರ ಇಂದು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಇಂದು ಬೆಳಿಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭ ಅವರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಸಾಥ್ ನೀಡಲಿದ್ದಾರೆ.