ದೊಡ್ಡಬಳ್ಳಾಪುರ: ಯಾವೊಬ್ಬ ವಿದ್ಯಾರ್ಥಿಯು ಸಹ ಸಾರಿಗೆ ಸಮಸ್ಯೆಯಿಂದಾಗಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬರಲು ತೊಂದರೆ ಆಗಬಾರದು. ವಿದ್ಯಾರ್ಥಿಗಳ ಮಾಹಿತಿ ಪಡೆಯುವ ಜವಾಬ್ದಾರಿ ಶಾಲೆಯ ಮುಖ್ಯ ಶಿಕ್ಷಕರಿಗೆ ವಹಿಸಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢ ಶಾಲೆಗಳ ಮುಖ್ಯಶಿಕ್ಷಕರ ಸಭೆಯಲ್ಲಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳ ಮತ್ತು ಪೋಷಕರೊಂದಿಗೆ ಸಭೆ ನಡೆಸಿ ಪರೀಕ್ಷೆಯ ಬಗ್ಗೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗದಂತೆ ಮಾತುಕತೆ ನಡೆಸಬೇಕು. ಪರೀಕ್ಷಾ ಕೇಂದ್ರಕ್ಕೆ ಬರಲು ಸಾರಿಗೆ ಸೌಲಭ್ಯ ಕುರಿತು ಮಾಹಿತಿ ಪಡೆಯಬೇಕು. ಅಗತ್ಯ ಇರುವ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ವಿದ್ಯಾರ್ಥಿಗಳ ಆರೋಗ್ಯದ ಸುರಕ್ಷತೆ ದೃಷ್ಠಿಯಿಂದ ಪರೀಕ್ಷಾ ಕೇಂದ್ರದಲ್ಲಿ ಸಾಕಷ್ಟು ಅಂತರ ಕಾಪಾಡಲು ಕೊಠಡಿ ಸಂಖ್ಯೆ ಹೆಚ್ಚು ಮಾಡಲಾಗುತ್ತಿದೆ. ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ ಎಂದರು.
2020-21ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸುವ ಕುರಿತು ಜೂನ್ 10 ರಿಂದ 12ರವರೆಗೆ ಮೂರು ದಿನಗಳ ಕಾಲ ಪೋಷಕರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಈ ವರ್ಷ 8ನೇ ತರಗತಿಯಿಂದಲೇ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟದ ಕಡೆಗೆ ಆದ್ಯತೆ ನೀಡಲಾಗುತ್ತಿದೆ. 10ನೇ ತರಗತಿಯ ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಒಂದು ವರ್ಷ ಮಾತ್ರ ಶ್ರಮವಹಿಸಿದರೆ ಸಾಲದು. ವಿದ್ಯಾರ್ಥಿ ಪ್ರಾಥಮಿಕ ಹಂತದಿಂದ ಪ್ರೌಢ ಶಾಲೆಗೆ ಬರುತ್ತಿದ್ದಂತೆ ನಿಗಾ ವಹಿಸಲಾಗುವುದು ಎಂದರು.
ಪ್ರೌಢ ಶಾಲಾ ಮುಖ್ಯಶಿಕ್ಷಕರ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬೈಯ್ಯಪ್ಪರೆಡ್ಡಿ, ಕ್ಷೇತ್ರ ಸಮನ್ವಯ ಅಧಿಕಾರಿ ಹನುಮಂತಪ್ಪ ಹಿಂದಿನಮನಿ,ವಿಷಯ ಪರಿವೀಕ್ಷಕ ಶ್ರೀನಿವಾಸ್, ಸರ್ಕಾರಿ ಪ್ರೌಢ ಶಾಲಾ ಉಪಪ್ರಾಂಶುಪಾಲ ಮಹದೇವ್ ಇದ್ದರು.