ದೇವನಹಳ್ಳಿ: ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಜ.19ರಂದು ನಡೆಯುವ ತಾಲ್ಲೂಕು ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಕ್ಕೆ ಕಂದಾಯ ಸಚಿವ ಆರ್. ಆಶೋಕ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ತಾಲ್ಲೂಕು ಘಟಕದ ನಿಯೋಜಿತ ನೂತನ ಅಧ್ಯಕ್ಷ ಬೊಮ್ಮವಾರ ಸುನಿ ಹೇಳಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ದಿ.ಆಟಲ್ ಬಿಹಾರಿ ವಾಹಪೇಯಿ ರವರ 96 ನೇ ಹುಟ್ಟು ಹಬ್ಬದ ಪ್ರಯುಕ್ತ ವಿವಿಧ ಕ್ರೀಡಾ ಸ್ವರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ, ಪಕ್ಷದ ನಿಷ್ಠಾವಂತ ಹಿರಿಯ ಕಾರ್ಯಕರ್ತರಿಗೆ ಸನ್ಮಾನ, ವಿವಿಧ ಪಕ್ಷಗಳಿಂದ ಬಿಜೆಪಿಗೆ ಮುಖಂಡರ ಸೇರ್ಪಡೆ ಕಾರ್ಯಕ್ರಮ ಇರಲಿದೆ ಎಂದು ಹೇಳಿದರು .
ಪದಗ್ರಹಣ ಕಾರ್ಯಕ್ರಮ ಮುಗಿದ ಒಂದು ವಾರದೊಳಗೆ ಯುವ ಮೊರ್ಚ, ರೈತ ಮೊರ್ಚಾ, ಎಸ್ಸಿ ಮತ್ತು ಎಸ್ಟಿ ಮೊರ್ಚಾ, ಶಕ್ತಿ ಕೇಂದ್ರ ಹೋಬಳಿಮಟ್ಟ ಒಟ್ಟು 26 ವಿವಿಧ ಘಟಕಗಳಿಗೆ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಸ್ಥಳೀಯ ಮುಖಂಡರ ಒಮ್ಮತದ ನಿರ್ಣಯದ ಮೇಲೆ ಆಯ್ಕೆ ಮಾಡಲಾಗುತ್ತದೆ. ಈ ಕ್ಷೇತ್ರದಲ್ಲಿ ಈವರೆಗೆ ಬಿಜೆಪಿ ಶಾಸಕರು ಆಯ್ಕೆಗೊಂಡಿಲ್ಲ ಎಂದು ಹೇಳಿದರು.
ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಪಕ್ಷದ ರಾಜ್ಯ ಮುಖಂಡರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಆದೇಶದ ಮೇರೆಗೆ ಪಕ್ಷವನ್ನು ಬಲ ಪಡಿಸಲು ಸ್ಥಳೀಯ ಮುಖಂಡರನ್ನು ವಿಶ್ವಾಸದಿಂದ ಒಗ್ಗೂಡಿಸುವ ಪ್ರಯತ್ನ ನಾವೆಲ್ಲರೂ ಮಾಡುತ್ತಿದ್ದೇವೆ ಎಂದು ಹೇಳಿದರು.
ಬಿಜೆಪಿ ಮುಖಂಡ ಜಿ.ಚಂದ್ರಣ್ಣ ಮಾತನಾಡಿ, ‘ನಾನು ಈ ಹಿಂದೆ ಜೆಡಿಎಸ್ ಪಕ್ಷದಿಂದ ಎರಡು ಬಾರಿ ಶಾಸಕನಾಗಿ ಆಯ್ಕೆಗೊಂಡು ಆನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಹಲವಾರು ಮಂದಿ ಸಂಪರ್ಕದಲ್ಲಿದ್ದಾರೆ. ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಮತದಾರರಿಗೆ ಆರ್ಥವಾಗುವ ರೀತಿಯಲ್ಲಿ ಮನವರಿಕೆ ಮಾಡಬೇಕು. ಪೌರತ್ವ ಕಾಯ್ದೆಯಿಂದ ದೇಶಕ್ಕೆ ಒಳ್ಳೆಯಾದಾಗುತ್ತದೆ. ಯಾರಿಗೂ ತೊಂದರೆ ಆಗುವುದಿಲ್ಲ’ ಎಂದು ಜನರಿಗೆ ತಿಳಿಸಬೇಕು ಎಂದು ಹೇಳಿದರು.
ಬಿಜೆಪಿ ರಾಜ್ಯ ಪರಿಷತ್ ಸದಸ್ಯ ದೇ.ಸು.ನಾಗರಾಜ್, ರೈತ ಮೊರ್ಚ ಜಿಲ್ಲಾ ಘಟಕ ಅಧ್ಯಕ್ಷ ರಾಜ್ ಗೋಪಾಲ್, ಬಿಜೆಪಿ ತಾಲ್ಲೂಕು ಘಟಕ ನಿಯೋಜಿತ ಪ್ರಧಾನ ಕಾರ್ಯದರ್ಶಿಗಳಾದ ನಿಲೇರಿ ಮಂಜುನಾಥ್, ರವಿಕುಮಾರ್, ಮಹಿಳಾ ಮೊರ್ಚ ತಾಲ್ಲೂಕು ಘಟಕ ಅಧ್ಯಕ್ಷ ನಾಗವೇಣಿ, ವಿವಿಧ ಘಟಕದ ಮುಖಂಡರು, ಶಕ್ತಿ ಕೇಂದ್ರದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.