ದೇವನಹಳ್ಳಿ: ‘2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯವಾಗಿ ಬಿಜೆಪಿ ಶಾಸಕರನ್ನು ಆಯ್ಕೆಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಿ ಸಂಘಟಿತ ಪ್ರಯತ್ನ ಮಾಡಬೇಕು’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸುಂದರೇಶ್ ಹೇಳಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಬುಧವಾರ ಫೆ. 27ರಂದು ಗ್ರಾಮಾಂತರ ಜಿಲ್ಲೆಯಲ್ಲಿ ನೂತನವಾಗಿ ಆಯ್ಕೆಗೊಂಡಿರುವ ಗ್ರಾಮ ಪಂಚಾಯಿತಿ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮ ಮತ್ತು ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಜಿಲ್ಲೆಯ ತಾಲ್ಲೂಕು ವ್ಯಾಪ್ತಿಯಲ್ಲಿ ಬಿಜೆಪಿ ಸಂಘಟಿಸಲು ಕಂದಾಯ ಸಚಿವ ಆರ್. ಅಶೋಕ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಕನ್ನಮಂಗಲ ಮಾರುತಿ ವಿದ್ಯಾಮಂದಿರ ಶಾಲಾ ಆವರಣದಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಬಿಜೆಪಿ ಕಾರ್ಯಕರ್ತರು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕ ಜಿ. ಚಂದ್ರಣ್ಣ ಮತ್ತು ಎಂ.ವಿ.ಎಂ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ಶ್ರೀನಿವಾಸ್ ಮಾತನಾಡಿದರು.
ಬಿಜೆಪಿ ತಾಲ್ಲೂಕು ಘಟಕದ ಉಪಾಧ್ಯಕ್ಷರಾದ ನಾಗೇಶ್, ಗೋಪಿ, ಖಜಾಂಚಿ ಕೇಶವ, ಯುವ ಮೋರ್ಚಾಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗೌರವ್ ಗೌಡ, ತಾಲ್ಲೂಕು ಅಧ್ಯಕ್ಷ ಮೋಹನ್ ಉಪಸ್ಥಿತರಿದ್ದರು.