ದೊಡ್ಡಬಳ್ಳಾಪುರ:ಕೊರೊನಾ ಮೂರನೇ ಅಲೆಯು ಮಕ್ಕಳಿಗೆ ಹರಡುವ ಸಾಧ್ಯತೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ಮುಂಜಾಗ್ರತಾ ಕ್ರಮಕೈಗೊಳ್ಳುವ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕಿದೆ ಎಂದು ಶಾಸಕ ಟಿ. ವೆಂಕಟರಮಣಯ್ಯ ಹೇಳಿದರು.
ನಗರದ ತಾಲ್ಲೂಕು ಕಚೇರಿ ಆವರಣದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಮಕ್ಕಳ ತಜ್ಞರ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಡಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಮಕ್ಕಳಿಗೆ ಕೋವಿಡ್ ಹರಡಲು ಆರಂಭವಾದರೆ ಪರಿಸ್ಥಿತಿ ಗಂಭೀರವಾಗಲಿದೆ. ಈ ದಿಸೆಯಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು ಗ್ರಾಮಗಳಿಗೆ ತೆರಳಿ ಮಾರ್ಗದರ್ಶನ ನೀಡಬೇಕಿದೆ ಎಂದು ಸೂಚಿಸಿದರು.
ಮಕ್ಕಳ ಆರೋಗ್ಯದ ಕಡೆ ಗಮನಹರಿಸುವುದು ಪೋಷಕರ ಕರ್ತವ್ಯ. ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಸರ್ಕಾರ ಪೌಷ್ಟಿಕ ಆಹಾರ ನೀಡುತ್ತಿದ್ದು, ಇದರ ಸದ್ಬಳಕೆಯಾಗಬೇಕಿದೆ ಎಂದರು.
ತಹಶೀಲ್ದಾರ್ ಟಿ.ಎಸ್. ಶಿವರಾಜ್ ಮಾತನಾಡಿ, ಇಂದಿನಿಂದ ಜಿಲ್ಲೆಯಾದ್ಯಂತ ಮಕ್ಕಳ ತಜ್ಞರ ನಡಿಗೆ ಹಳ್ಳಿ ಕಡೆಗೆ ಎಂಬ ವಿನೂತನ ಕಾರ್ಯಕ್ರಮ ಪ್ರಾರಂಭಿಸಲಾಗುತ್ತಿದೆ. ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ 6 ವೈದ್ಯಕೀಯ ತಂಡವನ್ನು ವ್ಯವಸ್ಥೆ ಮಾಡಲಾಗಿದೆ. ಈ ತಂಡಗಳ ಮೂಲಕ 20 ರಿಂದ 25 ದಿನಗಳವರೆಗೆ ತಾಲ್ಲೂಕಿನ ವಿವಿಧ ಗ್ರಾಮ ಹಾಗೂ ವಾರ್ಡ್ಗಳಿಗೆ ಭೇಟಿ ನೀಡಿ ಮಕ್ಕಳ ತಪಾಸಣೆ ಮಾಡಲಾಗುವುದು ಎಂದು ವಿವರಿಸಿದರು.
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಪೌಷ್ಟಿಕಾಂಶದ ಕಿಟ್ ನೀಡಲಾಗುವುದು. ತಾಲ್ಲೂಕಿನಲ್ಲಿ 17 ತೀರ ಅಪೌಷ್ಟಿಕತೆ ಇರುವ ಮಕ್ಕಳು ಹಾಗೂ 426 ಸಾಧಾರಣ ಮಕ್ಕಳನ್ನು ಗುರುತಿಸಲಾಗಿದೆ. ಮಕ್ಕಳಿಗೆ ಯಾವುದೇ ತೊಂದರೆ ಇದ್ದರೆ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು. ಕೋವಿಡ್ ಸುರಕ್ಷತೆ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್, ಸಿಡಿಪಿಒ ಅನಿತಾಲಕ್ಷ್ಮಿ, ಬಿಇಒ ಆರ್.ವಿ. ಶುಭಮಂಗಳಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.