ಆನೇಕಲ್: ‘ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಿಯಂತ್ರಣ ಮಾಡಬೇಕಾಗಿದೆ’ ಎಂದು ತಹಶೀಲ್ದಾರ್ ಸಿ.ಮಹಾದೇವಯ್ಯ ತಿಳಿಸಿದರು.
ಅವರು ಪಟ್ಟಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
‘ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಜರ್ ಬಳಕೆ ಸೇರಿದಂತೆ ಮತ್ತಿತರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ಹಾಕುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಡಿವೈಎಸ್ಪಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈ ಕಾರ್ಯದಲ್ಲಿ ಓಬವ್ವ ಪಡೆ ಮತ್ತು ಸ್ವಯಂ ಸೇವಕರ ನೆರವನ್ನು ಪಡೆಯಲಾಗುವುದು’ ಎಂದು ಮಾಹಿತಿ ನೀಡಿದರು.
‘ತೆಲಗರಹಳ್ಳಿ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕ್ವಾರೆಂಟೈನ್ ಕೇಂದ್ರದಲ್ಲಿರುವವರು ಹಲವಾರು ದೂರುಗಳನ್ನು ನೀಡಿದ್ದಾರೆ. ಸ್ವಚ್ಛತೆ, ಆಹಾರದ ಗುಣಮಟ್ಟದ ಬಗ್ಗೆ ದೂರುಗಳಿವೆ. ಆನೇಕಲ್ ಪುರಸಭೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಜವಬ್ದಾರಿ ವಹಿಸಿಕೊಳ್ಳಬೇಕು. ಗುಣಮಟ್ಟ ಆಹಾರ ಪೂರೈಕೆ ಮಾಡಬೇಕು’ ಎಂದು ಎಚ್ಚರಿಸಿದರು.
‘ಕಂಟೋನ್ಮೆಂಟ್ ಪ್ರದೇಶಗಳ ವರದಿಯನ್ನು ಪ್ರತಿದಿನ ಸಂಜೆ ಒಳಗಡೆ ಕಾರ್ಯಪಡೆಯ ಕಚೇರಿಗೆ ನೀಡುವ ನಿಟ್ಟಿನಲ್ಲಿ ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು’ ಎಂದರು.
ಕ್ವಾರೆಂಟೈನ್ ಕೇಂದ್ರದಲ್ಲಿ ದಾಖಲಾದವರ ಕೊರೊನಾ ಪರೀಕ್ಷೆಯ ವರದಿಯನ್ನು ತ್ವರಿತವಾಗಿ ನೀಡುವಂತೆ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ತಿಳಿಸಿದರು.
‘ಸೀಲ್ಡೌನ್ ಮಾಡುವಾಗ ಆ ಭಾಗದ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಕಚೇರಿಗಳನ್ನು ಸ್ಯಾನಿಟೈಜ್ ಮಾಡಿಸಬೇಕು. ಸರ್ಕಾರಿ ಅಧಿಕಾರಿಗಳಿಗೆ ಕೊರೊನಾ ಪರೀಕ್ಷೆಗೆಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಬೇಕು’ ಎಂದುಡಿವೈಎಸ್ಪಿ ಕೆ.ನಂಜುಂಡೇಗೌಡತಿಳಿಸಿದರು.
‘ಆನೇಕಲ್ ತಾಲ್ಲೂಕಿನಲ್ಲಿ 198 ಕೊರೊನಾ ಪ್ರಕರಣಗಳು ದಾಖಲಾಗಿವೆ. ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತಾಲ್ಲೂಕು ಆಡಳಿತ ಕೈಗೊಂಡಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಜ್ಞಾನಪ್ರಕಾಶ್ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ದೇವರಾಜೇಗೌಡ, ಸರ್ಕಲ್ ಇನ್ಸ್ಪೆಕ್ಟರ್ಗಳಾದ ಕೃಷ್ಣ, ಕೆ. ವಿಶ್ವನಾಥ್, ಬಿ.ಎಸ್.ಸತೀಶ್, ಶೇಖರ್, ನಾಗರಾಜು ಇದ್ದರು.