ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಮಾವೇಶವು ತಾಲ್ಲೂಕಿನ ಕತ್ತಿಮಾರಮ್ಮ ದೇಗುಲದ ಕಲ್ಯಾಣ ಮಂಟಪದಲ್ಲಿ ಬುಧವಾರನಡೆಯಿತು.
ದೇವಾಲಯದ ಆವರಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿತ್ತು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜನರು ಭಾಗಿಯಾಗುವುದರ ಮೂಲಕ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಸಮಾವೇಶದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರನ್ನು ಸನ್ಮಾನಿಸಿದರು.
ಬಳಿಕ ಮಾತನಾಡಿದ ಸಚಿವರು, ‘ಶ್ರಮಿಕರ ಕಲ್ಯಾಣವೇ ನಮ್ಮ ಗುರಿ. ನವ ಕರ್ನಾಟಕದ ಸಂಕಲ್ಪದೊಂದಿಗೆ ದೇಶ ಮತ್ತು ರಾಜ್ಯದ ಕಾರ್ಮಿಕ ವಲಯವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸಾಕಷ್ಟು ಅನುದಾನವನ್ನೂ ವ್ಯಯಿಸುತ್ತಿದೆ’ ಎಂದು ತಿಳಿಸಿದರು.
ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಅಂಬರೀಶ್ ಗೌಡ ಮಾತನಾಡಿ, ಸಮಾವೇಶದಲ್ಲಿ 500ಕ್ಕೂ ಹೆಚ್ಚು ಶ್ರಮಿಕ ವರ್ಗದವರು ಭಾಗವಹಿಸಿದ್ದಾರೆ. ಶಿಬಿರದಲ್ಲಿಯೂ ಯುವಜನರು ಹೆಚ್ಚಾಗಿ ಭಾಗವಹಿಸಿ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿದ್ದಾರೆ ಎಂದರು.
ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿದೆ. ಕಾರ್ಮಿಕ ಇಲಾಖೆಯಲ್ಲಿನ ಹಲವಾರು ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಕಿರು ಪುಸ್ತಕವನ್ನೂ ಬಿಡುಗಡೆ ಮಾಡಲಾಗಿದೆ. ಶ್ರಮಿಕ ವರ್ಗದವರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ಹೇಳಿದರು.
ಪಕ್ಷದ ವಿವಿಧ ವಿಭಾಗದ ಮುಖಂಡರನ್ನುಅಭಿನಂದಿಸಲಾಯಿತು.
ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಬ್ಯಾಟರಂಗೇಗೌಡ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ. ಸುಂದರೇಶ್, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಚ್.ಎಂ. ರವಿಕುಮಾರ್, ಕಾರ್ಮಿಕ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ವೆಂಕಟೇಶ್, ತಾಲ್ಲೂಕು ಸಂಚಾಲಕ ಎನ್. ಸುರೇಶ್ ಆಚಾರ್ ಹಾಜರಿದ್ದರು.