ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಜಾತಿಗೆ ಸೀಮಿತ ಸಲ್ಲ

Last Updated 7 ಡಿಸೆಂಬರ್ 2022, 5:07 IST
ಅಕ್ಷರ ಗಾತ್ರ

ವಿಜಯಪುರ (ಬೆಂ.ಗ್ರಾಮಾಂತರ):ಪಟ್ಟಣದ ಪುರಸಭಾ ಕಾರ್ಯಾಲಯದಲ್ಲಿ ಮಂಗಳವಾರ ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸದಸ್ಯರು, ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಸಂವಿಧಾನ ಶಿಲ್ಪಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಮುಖ್ಯಾಧಿಕಾರಿ ವಿ. ಮೋಹನ್ ಕುಮಾರ್ ಮಾತನಾಡಿ, ಪ್ರಪಂಚದಲ್ಲಿಯೇ ಅತ್ಯಂತ ಉತ್ತಮವಾದ ಸಂವಿಧಾನ ನೀಡಿರುವ ಕೀರ್ತಿ ಅಂಬೇಡ್ಕರ್‌ಗೆ ಸಲ್ಲುತ್ತದೆ. ನಾವೆಲ್ಲರೂ ಸಂವಿಧಾನಾತ್ಮಕವಾಗಿ ಬದುಕುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಸದಸ್ಯ ವಿ. ನಂದಕುಮಾರ್ ಮಾತನಾಡಿ, ಅಸ್ಪೃಶ್ಯತೆಯ ನೋವನ್ನು ಅನುಭವಿಸಿದ್ದ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಅವರು ಈ ದೇಶದ ಆಸ್ತಿಯಾಗಿದ್ದಾರೆ ಎಂದು ಹೇಳಿದರು.

ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಈ ಮಹಾನ್ ನಾಯಕನ ಕೊಡುಗೆಯನ್ನು ಭಾರತೀಯರು ಎಂದಿಗೂ ಮರೆಯುವುದಿಲ್ಲ. ಸಂವಿಧಾನ ರಚನೆಗೆ ಮಾತ್ರವಲ್ಲದೆ ಅವರ ಸೇವೆಯು ಜನತೆಯನ್ನು ಜಾಗೃತರನ್ನಾಗಿ ಮಾಡಿದೆ ಎಂದರು.

ಸದಸ್ಯ ಎ.ಆರ್. ಹನೀಪುಲ್ಲಾ ಮಾತನಾಡಿ, ಅಂಬೇಡ್ಕರ್ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರು ಶೋಷಿತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳಿಗೂ ನೆರವಾದರು. ಅವರ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಂದು ಸಲಹೆ ನೀಡಿದರು.

ಕಂದಾಯ ನಿರೀಕ್ಷಕ ತ್ಯಾಗರಾಜ್ ಮಾತನಾಡಿ, ಅಂಬೇಡ್ಕರ್ ಮೃತಪಟ್ಟಾಗ ಅವರ ಬಳಿ ಇದ್ದ ಹಣ ಕೇವಲ ₹ 300. ಅವರ ಮರಣದ ಗೌರವಾರ್ಥವಾಗಿ ಪ್ರಪಂಚದ ಎಲ್ಲಾ ದೇಶಗಳು ರಾಷ್ಟ್ರಧ್ವಜಗಳನ್ನು ಅರ್ಧಕ್ಕೆ ಇಳಿಸಿ ಗೌರವಿಸಿದ್ದವು. 527 ಭಾಷಣ ಮಾಡಿದ್ದ ಅವರು 9 ಭಾಷೆಗಳನ್ನು ಕರಗತ ಮಾಡಿಕೊಂಡಿದ್ದರು ಎಂದು ಸ್ಮರಿಸಿದರು.

ಸದಸ್ಯೆ ವಿಮಲಾ ಬಸವರಾಜ್, ನಾಮಿನಿ ಸದಸ್ಯ ಕನಕರಾಜು, ಅಧ್ಯಕ್ಷೆ ರಾಜೇಶ್ವರಿ ಭಾಸ್ಕರ್ ಮಾತನಾಡಿದರು. ಉಪಾಧ್ಯಕ್ಷ ಎಂ. ಕೇಶವಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಸಿ. ನಾರಾಯಣಸ್ವಾಮಿ, ಸದಸ್ಯರಾದ ಶಿಲ್ಪಾ ಅಜಿತ್, ರಾಜಣ್ಣ, ಎಕ್ಭಾಲ್, ಎಂ. ನಾರಾಯಣಸ್ವಾಮಿ, ಶ್ರೀರಾಮ್, ಸಿ.ಎಂ. ರಾಮು, ಕವಿತಾ, ರವಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT