ದೊಡ್ಡಬಳ್ಳಾಪುರ: ದಲಿತ ವಿದ್ಯಾರ್ಥಿ ಮೇಲಿನ ಹಲ್ಲೆಗೆ ಖಂಡನೆ

ದೊಡ್ಡಬಳ್ಳಾಪುರ: ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ದಲಿತ ವಿದ್ಯಾರ್ಥಿ ದಿಲೀಪ್ ಕುಮಾರ್ ಮೇಲೆ ಹಲ್ಲೆ ನಡೆಸಿರುವ ಪ್ರಕಾಶ್ ಎಂಬಾತನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಗುರುವಾರ ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನ ಸಂಘಟನೆಯಿಂದ ನಗರದ ಡಿವೈಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನ ಸಂಘಟನೆಯ ರಾಜ್ಯ ಅಧ್ಯಕ್ಷ ಮುನಿಅಂಜನಪ್ಪ ಮಾತನಾಡಿ, ‘ಕ್ಷುಲ್ಲಕ ವಿಚಾರಕ್ಕಾಗಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಲಾಗಿದೆ. ಆದರೆ, ಪೊಲೀಸರು ದೂರು ದಾಖಲಿಸಿದ್ದಾರೆ ವಿನಾ ಕಠಿಣ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.
ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯುವ ನಿಟ್ಟಿನಲ್ಲಿ ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಅಸ್ಪೃಶ್ಯತೆ ತಡೆಯುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಪ್ರತಿಭಟನೆಯಲ್ಲಿ ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನ ಸಂಘಟನೆಯ ಬೆಂಗಳೂರು ನಗರ ಅಧ್ಯಕ್ಷ ಅಯೂಬ್ಖಾನ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಗೂಳ್ಯ ಹನುಮಣ್ಣ, ಪ್ರಧಾನ ಕಾರ್ಯದರ್ಶಿ ಚನ್ನಮರಿಯಪ್ಪ, ತಾಲ್ಲೂಕು ಅಧ್ಯಕ್ಷ ಪುನೀತ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಹೊಸಕೋಟೆ ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಯಲಹಂಕ ಅಧ್ಯಕ್ಷ ಕಾಂತರಾಜ್, ಮುನಿಲಕ್ಷ್ಮಮ್ಮ, ಕಾರ್ಮಿಕ ಘಟಕದ ಅಧ್ಯಕ್ಷ ಅಶೋಕ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.