ದೊಡ್ಡಬಳ್ಳಾಪುರ:ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 46 ವರ್ಷಗಳ ಹಿಂದೆ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಕರಾಳ ದಿನವನ್ನಾಗಿ ಆಚರಿಸಲಾಯಿತು.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮೀಸಾ ಅಡಿಯಲ್ಲಿ ಬಂಧಿತರಾಗಿದ್ದ ಮುಖಂಡರಾದ ಎಂ.ಪಿ. ನಾಗರಾಜ್ ಹಾಗೂ ಜಿಂಕೆ ರಾಜಣ್ಣ ಅವರನ್ನು ಅವರ ನಿವಾಸಗಳಲ್ಲಿ ಸನ್ಮಾನಿಸಲಾಯಿತು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಎ.ವಿ. ನಾರಾಯಣಸ್ವಾಮಿ ಮತ್ತು ಪ್ರಧಾನ ಕಾರ್ಯದರ್ಶಿ ಆರ್. ಗೋಪಿ ಮಾತನಾಡಿ, 46 ವರ್ಷಗಳ ಹಿಂದೆ ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ಪ್ರಜಾಪ್ರಭುತ್ವಕ್ಕೆ ವಿರೋಧವಾಗಿ ತುರ್ತು ಪರಿಸ್ಥಿತಿ ಹೇರಿದ್ದರು. ಜನರ ಮೂಲಭೂತ ಹಕ್ಕುಗಳು, ಪತ್ರಿಕೆ ಹಾಗೂ ನ್ಯಾಯಾಂಗದ ಕಾರ್ಯವೈಖರಿಗೆ ತಡೆ ನೀಡಿದ್ದರು ಎಂದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಜಿ. ನಾಗರಾಜು, ಉಪಾಧ್ಯಕ್ಷೆ ಉಮಾ ಮಹೇಶ್ವರಿ, ಕಾರ್ಯಾಲಯ ಕಾರ್ಯದರ್ಶಿ ಜೆ. ಮಂಜುನಾಥ್, ತಾಲ್ಲೂಕು ಅಧ್ಯಕ್ಷ ಟಿ.ಎನ್. ನಾಗರಾಜು, ನಗರ ಘಟಕದ ಅಧ್ಯಕ್ಷ ಎಚ್.ಎಸ್. ಶಿವಶಂಕರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಾಂತರಾಜು ಹಾಜರಿದ್ದರು.