ದೇವನಹಳ್ಳಿ: ಚನ್ನರಾಯಪಟ್ಟಣ ಹೋಬಳಿ ಐದು ಗ್ರಾಮಗಳ ವ್ಯಾಪ್ತಿಯಲ್ಲಿ 1202 ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಕ್ಕೆ ಒಳಪಡಿಸಿ ಒಕ್ಕಲೆಬ್ಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತರು ಜಿಲ್ಲಾಡಳಿತ ಭವನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ರೈತ ಮುಖಂಡ ಎಂ.ಶ್ರೀನಿವಾಸಮೂರ್ತಿ ಮಾತನಾಡಿ, ಸರ್ಕಾರ ಮತ್ತು ಕೆಐಎಡಿಬಿ ಅಧಿಕಾರಿಗಳು ನೋಟಿಸ್ ನೀಡದೆ ಏಕಾಏಕಿ ಅಧಿಸೂಚನೆ ಹೊರಡಿಸಿ ಭೂಸ್ವಾಧೀನಕ್ಕೆ ಮುಂದಾಗಿದ್ದಾರೆ ಎಂದರು.
ರೈತರು ಭೂಮಿ ಕಳೆದುಕೊಂಡರೆ ಮುಂದಿನ ಅನಾಹುತಗಳಿಗೆ ಸರ್ಕಾರ ಮತ್ತು ಕೆಎಡಿಬಿ ಅಧಿಕಾರಿಗಳೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಚೆಗೆ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ದರ ನಿಗದಿ ಸಲಹಾ ಸಮಿತಿ ಸಭೆಯಲ್ಲಿ ಯಾವುದೇ ಕಾರಣಕ್ಕೂ ಭೂಮಿ ನೀಡುವುದಿಲ್ಲ ಎಂದು ರೈತರು ಸಭೆ ಬಹಿಷ್ಕಾರ ಹಾಕಿದ್ದಾರೆ. ಸರ್ಕಾರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಫಲವತ್ತಾದ 4500 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡು ಬಿಡಿಗಾಸು ಪರಿಹಾರ ನೀಡಿದೆ ಎಂದು ದೂರಿದರು.
ರೈತರನ್ನು ತಾಲ್ಲೂಕಿನಿಂದಲೇ ಹೊರ ಹಾಕುವ ಪ್ರಯತ್ನ ನಡೆದಿದೆ. ಯಾವುದೇ ಕಾರಣಕ್ಕೂ ಜಮೀನು ನೀಡಲು ರೈತರು ಸಿದ್ಧರಿಲ್ಲ. ಸ್ವಾಧೀನಕ್ಕೆ ಮುಂದಾದರೆ ರೈತರ ಕುಟುಂಬದಲ್ಲಾಗುವ ಸಾವು – ನೋವುಗಳಿಗೆ ಅಧಿಕಾರಿಗಳೇ ಜವಾಬ್ದಾರರು ಎಂದು ದೂರಿದರು.