ದೇವನಹಳ್ಳಿ: ಪ್ರತಿ ತಾಲ್ಲೂಕಿಗೆ ಒಂದರಂತೆ ಮೀನು ಖಾದ್ಯ ಮಳಿಗೆ ಹಾಗೂ ಅಲಂಕಾರಿಕ ಮೀನು ಉತ್ಪಾದನಾ ಘಟಕ ಸ್ಥಾಪಿಸುವಂತೆ ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಕ್ರಿಯಾ ಯೋಜನೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂದು 50 ಟನ್ ಸಾಮರ್ಥ್ಯದ ಐಸ್ ಕಾರ್ಖಾನೆ, 50 ಟನ್ ಸಾಮರ್ಥ್ಯದ ಶೀತಲಗೃಹ, 10 ಆರ್.ಎ.ಎಸ್ ಘಟಕಗಳನ್ನು ಹಾಗೂ ಮೀನು ಕೃಷಿ ಕೊಳಗಳನ್ನು ನಿರ್ಮಿಸಲು ತಿಳಿಸಿದರು. 2020-21ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಕ್ರಿಯಾ ಯೋಜನೆಗೆ ₹ 6.73 ಕೋಟಿಗೆ ಜಿಲ್ಲಾಧಿಕಾರಿ ಅನುಮೋದನೆ ನೀಡಿದರು.
ಸಮಿತಿ ಸದಸ್ಯರಾದ ಕೆ.ವಿ.ಕೆ. ಹಾಡೋನಹಳ್ಳಿ ಮುಖ್ಯಸ್ಥ ಡಾ.ಮಲ್ಲಿಕಾರ್ಜುನ, ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥ ಶಿವಕುಮಾರ್ ಮಗದ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಧುಸೂದನ್ ಇದ್ದರು.