ಆನೇಕಲ್: ‘ಸೂರಿಲ್ಲದವರಿಗೆ ಸೂರು ಕಲ್ಪಿಸಿಕೊಡಬೇಕು. ಮೂಲಸೌಲಭ್ಯ ಕಲ್ಪಿಸಿಕೊಡುವ ಮೂಲಕ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಪರಿವರ್ತನಾವಾದ) ಸಂಘಟನೆ ಕಾರ್ಯಕರ್ತರು ಚಂದಾಪುರ ಪುರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕ ಎಂ.ಗೋವಿಂದರಾಜು ಮಾತನಾಡಿ, ‘ಹಲವು ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ಸೂರು ನಿರ್ಮಿಸಿಕೊಂಡು ವಾಸ ಮಾಡುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡಿ ಆ ಬಡಾವಣೆಗಳಲ್ಲಿ ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.
‘ಚಂದಾಪುರ ಪುರಸಭೆ ವ್ಯಾಪ್ತಿಯ ರಾಮಸಾಗರದ 111ನೇ ಸರ್ವೇ ನಂ.ನಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ಮನೆ ಕಟ್ಟಿಕೊಂಡು ಹಲವು ವರ್ಷಗಳಿಂದ ವಾಸ ಮಾಡುತ್ತಿವೆ. ಈ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು. ಹೀಲಲಿಗೆಯಲ್ಲಿ ಸ್ಮಶಾನದ ಜಮೀನು ಒತ್ತುವರಿ ತೆರವುಗೊಳಿಸಬೇಕು. ಚಂದಾಪುರ ಸಂತೆಯಲ್ಲಿ ಸಾರ್ವಜನಿಕರಿಗೆ ಶೌಚಾಲಯ, ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು’ ಎಂದು ತಿಳಿಸಿದರು.
ಸಂಘಟನೆಯ ರಾಜ್ಯ ಸಮಿತಿ ಸದಸ್ಯರಾದ ಕೆ.ಮುನಿರಾಜು, ಗೌತಮ್ ವೆಂಕಿ, ಮುಖಂಡರಾದ ಸುರೇಶ್ ಪೋತಾ, ಮುನಿಯಲ್ಲಪ್ಪ, ವೆಂಕಟೇಶ್, ಹಳೇಹಳ್ಳಿ ರಾಜು, ಸಿ.ಎಂ.ಮುನಿರಾಜು, ಸಿ.ವೈ.ಶ್ರೀನಿವಾಸ್, ವೇಣುಗೋಪಾಲ್, ರಮೇಶ್, ಹರೀಶ್, ಕೃಷ್ಣಪ್ಪ, ರೇಣುಕಮ್ಮ, ತಾಮರೈ ಶುಭಾ ಹಾಜರಿದ್ದರು.