ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಪ್ರದೇಶದಲ್ಲೂ ಮರಗಳ ನಾಶ: ಕಳವಳ

Last Updated 6 ಜೂನ್ 2019, 13:17 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಪರಿಸರ ಕಾಳಜಿ ಪ್ರತಿಯೊಬ್ಬರಲ್ಲೂ ಇರಬೇಕು. ಶಾಲಾ ಹಂತದಲ್ಲೇ ಪರಿಸರ ಸಂರಕ್ಷಣೆ ಬಗ್ಗೆ ಶಿಕ್ಷಕರು ಹೆಚ್ಚಿನ ಮಾಹಿತಿಯನ್ನು ಮಕ್ಕಳಿಗೆ ತಿಳಿಸಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ದೇವರಾಜ್ ತಿಳಿಸಿದರು.

ಇಲ್ಲಿನ ಕಾರಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯಿತಿ ವತಿಯಿಂದ ವಿವಿಧ ಬಗೆಯ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಗ್ರಾಮೀಣ ಭಾಗದಲ್ಲೂ ಮರಗಳ ಕೊರತೆ ಹೆಚ್ಚುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ವನ ಸಂಪತ್ತು ನಾಶವಾಗುತ್ತಿದೆ. ಪ್ರಜ್ಞಾವಂತ ಸಮುದಾಯ ಪರಿಸರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಗ್ರಾಮೀಣ ಪ್ರದೇಶಗಳು ಕಾಂಕ್ರಿಟ್‌ಮಯವಾಗುತ್ತಿವೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸದಿದ್ದರೆ ಮನುಕುಲ ಮತ್ತು ಜೀವಸಂಕುಲ ವಿನಾಶದತ್ತ ಸಾಗಲಿದೆ. ಬೆಳೆಯುತ್ತಿರುವ ಕೈಗಾರಿಕರಣ, ಹೆಚ್ಚುತ್ತಿರುವ ಭೂಮಿಯ ತಾಪಮಾನ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಪದೇ ಪದೇ ಸಂಭವಿಸುತ್ತಿರುವ ಪ್ರಕೃತಿ ವಿಕೋಪಗಳಿಂದ ಅಪಾರ ಜೀವ ಸಂಕುಲ ನಾಶವಾಗುತ್ತಿದೆ.ವಿಶ್ವ ಪರಿಸರ ದಿನಾಚರಣೆ ಅರ್ಥಪೂರ್ಣವಾಗಬೇಕಾದರೆ ನೆಡಲಾಗಿರುವ ಸಸಿಯನ್ನು ಸಂರಕ್ಷಣೆ ಮಾಡಿ ಬೆಳೆಸಬೇಕು’ ಎಂದು ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಸಿ ಬೀರೇಶ್ ಮಾತನಾಡಿ, ‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಕಾರಹಳ್ಳಿ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲೂ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ. ಗ್ರಾಮ ಅರಣ್ಯೀಕರಣಗೊಳ್ಳಲು ಹಲವು ಯೋಜನೆಗಳ ಮೂಲಕ ಜನ ಜಾಗೃತಿ ಮೂಡಿಸಿ ಪರಿಸರ ಉಳಿಸಿ ಬೆಳೆಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದರು.

ಪಂಚಾಯಿತಿ ಕಾರ್ಯದರ್ಶಿ ರಾಜೇಶ್, ಕರ ವಸೂಲಿಗಾರ ಬಾಬು, ಗಣಕಯಂತ್ರ ಆಪರೇಟರ್ ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT