ವಿಜಯಪುರ(ದೇವನಹಳ್ಳಿ): ಪಟ್ಟಣದಲ್ಲಿ ಜಿಲ್ಲಾಧಿಕಾರಿಯಿಂದ ಅಧಿಕೃತವಾಗಿ ಅನುಮತಿ ಪಡೆದುಕೊಂಡಿರುವ ಪಟಾಕಿ ಅಂಗಡಿ ಹೊರತುಪಡಿಸಿ, ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಪಟಾಕಿಗಳು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಆರ್. ಸಂತೋಷ್ ಎಚ್ಚರಿಕೆ ನೀಡಿದರು.
ಪಟ್ಟಣದಲ್ಲಿ ಚಿಲ್ಲರೆ ಅಂಗಡಿಗಳಲ್ಲಿ ಅನಧಿಕೃತವಾಗಿ ಪಟಾಕಿ ಮಾರಾಟದ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಕೆಲ ಅಂಗಡಿಗಳಿಗೆ ಭೇಟಿ ನೀಡಿದ್ದ ಅವರು, ಸಾಮಾನ್ಯ ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು.
ಅನಧಿಕೃತವಾಗಿ ಮಾರಾಟ ಮಾಡುವುದರಿಂದ ಹೆಚ್ಚು ಶಬ್ದವನ್ನು ಉಂಟು ಮಾಡುವ, ಮಾಲಿನ್ಯಕಾರಕ ಪಟಾಕಿ ಮಾರಾಟ ಮಾಡುತ್ತಾರೆ. ಇದರಿಂದ ಸಣ್ಣ, ಸಣ್ಣ ಮಕ್ಕಳು, ಖರೀದಿ ಮಾಡಿಕೊಂಡು ಸುರಕ್ಷತೆಯಿಲ್ಲದೆ ಸಿಡಿಸುವುದರಿಂದ ಮಕ್ಕಳಿಗೆ ಅಪಾಯವಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದ್ದರಿಂದ ಮುಂಜಾಗ್ರತೆ ವಹಿಸಬೇಕು ಎಂದರು.
ಪಟಾಕಿ ಮಾರಾಟಕ್ಕೆ ಈ ಮೊದಲು ಗ್ರಂಥಾಲಯದ ಮುಂಭಾಗದ ಮೈದಾನದಲ್ಲಿ ಅವಕಾಶ ನೀಡಲಾಗುತ್ತಿತ್ತು. ಈ ಬಾರಿ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟ ಮೈದಾನದಲ್ಲಿ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.