ದೇವನಹಳ್ಳಿ: ‘ತಾಲ್ಲೂಕಿನಾದ್ಯಂತ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ಧಿ ಯೋಜನಾ ಪ್ರಾಧಿಕಾರದಿಂದ ತುರ್ತು ಕೆಲಸ ಕೈಗೆತ್ತಿಕೊಂಡು, ದೇವನಹಳ್ಳಿಯನ್ನು ವಿಶ್ವ ದರ್ಜೆ ನಗರವಾಗಿಸುವ ಗುರಿ ಹೊಂದಿದ್ದೇವೆ’ ಎಂದು ಬಯಪ್ಪ ಅಧ್ಯಕ್ಷ ವಿ.ಶಾಂತಕುಮಾರ್ ತಿಳಿಸಿದರು.
ತಾಲ್ಲೂಕಿನ ಕುಂದಾಣ ಗ್ರಾ.ಪಂ ಕಚೇರಿ ಆವರಣದಲ್ಲಿ ಭಾನುವಾರ ನಡೆದ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳೊಂದಿಗೆ ಅಭಿವೃದ್ಧಿ ಕಾಮಗಾರಿಗೆ ಸಮರೋಪಾದಿಯಲ್ಲಿ ಚಾಲನೆ ನೀಡುತ್ತಿದೆ. ಇದೇ ಮೊದಲ ಬಾರಿಗೆ ರಾಜ್ಯದ ಮುಖ್ಯಮಂತ್ರಿಯೊಬ್ಬರು ಜಿಲ್ಲೆಗೆ ಒಂದು ವಾರದಲ್ಲಿ 3 ಬಾರಿ ಭೇಟಿ ಕೊಟ್ಟು, ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಪಕ್ಷವೂ ಜಯಭೇರಿ ಭರಿಸುತ್ತದೆ ಎಂದು ಭವಿಷ್ಯ ನುಡಿದರು.
ಬಯಪ್ಪ ಸದಸ್ಯ ಪ್ರಸನ್ನ ಕುಮಾರ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ದೂರದೃಷ್ಟಿಯ ಪರಿಣಾಮ ಜಿಲ್ಲೆಯ ಹಲವು ಅಭಿವೃದ್ಧಿಗೆ ಚಾಲನೆ ದೊರೆತಿದೆ. ಕಾಂಗ್ರೆಸ್ ಅಭಿವೃದ್ಧಿ ಮೂಲಕ ಜನರ ಮನಸ್ಸು ಗೆಲ್ಲುವ ಕೆಲಸ ಮಾಡುತ್ತದೆ ಎಂದರು.
ಕುಂದಾಣ ಗ್ರಾ.ಪಂ ಅಧ್ಯಕ್ಷೆ ನೇತ್ರಾವತಿ ಮಾತನಾಡಿದರು.
ಪಿಡಿಓ ಪದ್ಮನಾಭ, ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಸದಸ್ಯರಾದ ಕೆ.ವಿ.ಸ್ವಾಮಿ, ನವೀನ್, ಪ್ರವೀಣ್, ಶಾಂತಕುಮಾರ್, ಕಾರ್ಯದರ್ಶಿ ಉಷಾ, ಸುರೇಶ್ ಉಪಸ್ಥಿತರಿದ್ದರು.