ದೇವನಹಳ್ಳಿ: ಕಳೆದ ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತಿದ್ದೇನೆ. ಈ ಬಾರಿ ಮತದಾರರು ಕೈಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಹೇಳಿದರು.
ನಗರದಲ್ಲಿ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಎಲ್ಲ ಘಟಕಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ. ಜನರ ಅಭಿಪ್ರಾಯ ಸುಭದ್ರ ಸರ್ಕಾರ, ದೇಶದ ಸುರಕ್ಷತೆ ದೃಷ್ಠಿಯಿಂದ ಬಿಜೆಪಿಗೆ ಮತ ಹಾಕಲಿದ್ದಾರೆ ಎಂದು ಹೇಳಿದರು.
ಈ ಹಿಂದೆ ನಡೆದ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಇತ್ತು. ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಎರಡು ಸಾರಿ ವೀರಪ್ಪ ಮೊಯಿಲಿಯನ್ನು ಗೆಲ್ಲಿಸಿದ್ದೀರಿ. ಆದರೆ, ಅವರು ಏನು ಮಾಡಲಿಲ್ಲ. ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸೋಣ ಎಂದು ಜನ ತೀರ್ಮಾನ ಮಾಡಿದ್ದಾರೆ ಎಂದರು.
ಎತ್ತಿನಹೊಳೆ ಯೋಜನೆಗೆ ಸದಾನಂದಗೌಡ ಮುಖ್ಯಮಂತ್ರಿ ಆಗಿದ್ದಾಗ ₹6 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದ್ದರು. ಈ ಕ್ಷೇತ್ರದಲ್ಲಿ ಕೈಗಾರಿಕಾ ವಲಯ ಆಗಬೇಕು ನಿರುದ್ಯೋಗಳಿಗೆ ಉದ್ಯೋಗ ಸಿಗಬೇಕು. ಎತ್ತಿನಹೊಳೆ ಯೋಜನೆ ತ್ವರಿತವಾಗಿ ಬರಬೇಕು ಎಂದು ಹೇಳಿದರು.
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಮಾತನಾಡಿ, ರಾಹುಲ್ ಗಾಂಧಿಗೆ ಗ್ರಾಮ ಪಂಚಾಯಿತಿ ಸದಸ್ಯನಷ್ಟು ಜ್ಞಾನವಿಲ್ಲ. ಕಾಂಗ್ರೆಸ್ ಆಡಳಿತದಲ್ಲೇ ಹೆಚ್ಚು ಭ್ರಷ್ಟಾಚಾರ ನಡೆದಿದೆ. ಪ್ರಧಾನಿ ಮೋದಿ ಕುಟುಂಬ ರಾಜಕಾರಣವಲ್ಲ. ರಾಹುಲ್ ಗಾಂಧಿ ಭಾಷಣಕ್ಕೆ ಯಾರು ಮರುಳು ಆಗುವುದಿಲ್ಲ ಎಂದು ದೂರಿದರು.
ಬಿಜೆಪಿ ಜಿಲ್ಲಾ ಘಟಕ ಬಿ.ರಾಜಣ್ಣ, ಉಪಾಧ್ಯಕ್ಷ ಎಚ್.ಎಂ. ರವಿಕುಮಾರ್ ಹಾಗೂ ಬಿಜೆಪಿ ವಿವಿಧ ತಾಲ್ಲೂಕು ಮತ್ತು ಹೋಬಳಿ ಘಟಕ ಪದಾಧಿಕಾರಿಗಳು ಉಪಸ್ಥಿತರಿದ್ದರು.