ಆನೇಕಲ್:ಪಟ್ಟಣದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಕಿಟ್ಗಳನ್ನು ಶಾಸಕ ಬಿ. ಶಿವಣ್ಣ ವಿತರಿಸಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ನಿಲಯಗಳಲ್ಲಿ ಎಲ್ಲಾ ಸೌಲಭ್ಯ ದೊರೆಯುವಂತಾಗಬೇಕು. ಉನ್ನತ ಸಾಧನೆಯ ದೃಷ್ಟಿಯಿಂದ ವಿದ್ಯಾರ್ಥಿಗಳು ಪೋಷಕರನ್ನು ಬಿಟ್ಟು ವಿದ್ಯಾರ್ಥಿ ನಿಲಯಗಳಲ್ಲಿರುತ್ತಾರೆ. ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಇದ್ದಾರೆ ಎಂದರು.
ಹಾಸ್ಟೆಲ್ಗಳಲ್ಲಿರುವ ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸೌಲಭ್ಯ ಕಲ್ಪಿಸುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಅತ್ತಿಬೆಲೆ, ಆನೇಕಲ್, ಇಂಡ್ಲವಾಡಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತಾ ಕಿಟ್ಗಳನ್ನು ನೀಡಲಾಗಿದೆ ಎಂದರು.
ವಿದ್ಯಾರ್ಥಿ ನಿಲಯದಲ್ಲಿ ಕರಾಟೆ ತರಗತಿ, ಕಂಪ್ಯೂಟರ್ ಸೇರಿದಂತೆ ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಯ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಜೊತೆಗೆ ಪಠ್ಯೇತರ ಮತ್ತು ಕೌಶಲಾಧಾರಿತ ತರಗತಿಗಳು ದೊರೆತಂತಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡುವುದಕ್ಕೆ ಮೊದಲ ಆದ್ಯತೆ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಪೌಷ್ಟಿಕ ಊಟವನ್ನು ಸರಿಯಾದ ಸಮಯಕ್ಕೆ ಪೂರೈಕೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ವಹಿಸಬೇಕು ಎಂದರು.
ಪುರಸಭಾ ಅಧ್ಯಕ್ಷ ಎನ್.ಎಸ್. ಪದ್ಮನಾಭ, ಸದಸ್ಯರಾದ ರಾಜೇಂದ್ರ ಬಾಬು, ಮಹಾಂತೇಶ್ ಇದ್ದರು.
ಹುಸ್ಕೂರು ಮುಖ್ಯರಸ್ತೆ ಡಾಂಬರೀಕರಣ: ತಾಲ್ಲೂಕಿನ ಹುಸ್ಕೂರು ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಶಿವಣ್ಣ ಗುರುವಾರ ಚಾಲನೆ ನೀಡಿದರು.
ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾದುದ್ದು ಸರ್ಕಾರ ಜವಾಬ್ದಾರಿಯಾಗಿದೆ. ಸಾರ್ವಜನಿಕರಿಗೆ ಅಗತ್ಯವಿರುವ ರಸ್ತೆ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.
ಹುಸ್ಕೂರು ಮುಖ್ಯರಸ್ತೆ ಹಲವು ದಿನಗಳಿಂದ ಹದಗೆಟ್ಟಿತ್ತು. ಈ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಹಾಗಾಗಿ ಆದ್ಯತೆ ಮೇರೆಗೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.