ಹೊಸಕೋಟೆ: ಗ್ಯಾರಂಟಿ ಅನುಷ್ಠಾನಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಣ ಬಳಕೆ ಮಾಡುವುದು ಸರಿಯಲ್ಲ. ಇದರಿಂದ ದಲಿತರ ಏಳಿಗೆಗೆ ತೊಡಕುಂಟಾಗಲಿದೆ ಎಂದು ಜಾಂಬವ ಯುವಸೇನೆ ರಾಜ್ಯಾಧ್ಯಕ್ಷ ಎಸ್.ಎಂ.ರಮೇಶ್ ಚಕ್ರವರ್ತಿ ಅಭಿಪ್ರಾಯಪಟ್ಟರು.
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿರುವುದು ಸರಿಯಷ್ಟೆ. ಆದರೆ, ಹಣವನ್ನು ಸರಿದೂಗಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ನಿಗಮದ ₹11,500 ಕೋಟಿಯಷ್ಟು ಹಣವನ್ನು ಬಳಕೆ ಮಾಡಿಕೊಳ್ಳುತ್ತಿರುವುದು ದಲಿತರಿಗೆ ಮಾಡಿದ ಅನ್ಯಾಯ ಎಂದರು.
ಮೂಗಿಗೆ ತುಪ್ಪ ಸವರಿದಂತೆ ಅಂಬೇಡ್ಕರ್ ನಿಗಮ ಮಂಡಳಿ, ಲಿಡ್ಕರ್ ಮತ್ತು ಬಾಬು ಜಗಜೀವನ್ ರಾಂ ನಿಗಮ ಮಂಡಳಿಗಳಿಗೆ ಕೇವಲ ₹150 ಕೋಟಿಯಷ್ಟೇ ನೀಡಿರುವುದು ಸರಿಯಲ್ಲ. ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡದ ಹಣವನ್ನು ಅದೇ ಸಮುದಾಯದ ಗ್ಯಾರಂಟಿ ಯೋಜನೆಗೆ ಬಳಸಲಾಗುವುದು ಎಂದಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ದಲಿತರಿಗೆ ಮಾಡುತ್ತಿರುವ ಮೋಸ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.