ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ವೀರಪ್ಪ ಮೊಯಿಲಿ
Published 7 ಮಾರ್ಚ್ 2024, 6:16 IST
Last Updated 7 ಮಾರ್ಚ್ 2024, 6:16 IST
ಅಕ್ಷರ ಗಾತ್ರ

ಕನಸವಾಡಿ (ದೊಡ್ಡಬಳ್ಳಾಪುರ): ಎರಡು ವರ್ಷದ ಒಳಗೆ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಿ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಕೋಲಾರ ಜಿಲ್ಲೆಯ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪಮೊಯ್ಲಿ ಹೇಳಿದರು.

ತಾಲ್ಲೂಕಿನಲ್ಲಿ ಭಾನುವಾರ ನಡೆದ ಮಧುರೆ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ನೀರು ಹರಿಯದೇ ಇರುವ ದೊಡ್ಡಬಳ್ಳಾಪುರ,ನೆಲಮಂಗಲ ತಾಲ್ಲೂಕಿನ ಕೆರೆಗಳಿಗೆ ವೃಷಭಾವತಿಯ ಶುದ್ದೀಕರಿಸಿದ ನೀರು ಪೂರೈಸುವ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ಇದು ಕೂಡ ಕಾಂಗ್ರೆಸ್ ಅವಧಿಯ ಆಡಳಿದಲ್ಲೇ ಈಡೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಹಿಂದೆ ಇಂದಿರಾಗಾಂಧಿ ಅವರನ್ನು ಲೋಕಸಭಾ ಸ್ಥಾನದಿಂದ ಅನೂರ್ಜಿತಗೊಳಿಸಿದ ಮೇಲೆ ಕಾಂಗ್ರೆಸ್ ಪ್ರಚಂಡ ವಿಜಯ ಸಾಧಿಸಿತ್ತು. ಪ್ರಸ್ತುತ ರಾಹುಲ್ ಗಾಂಧಿ ಅವರನ್ನು ಸಂಸತ್‌ ಸ್ಥಾನದಿಂದ ಅಮಾನತು ಮಾಡಲಾಗಿದೆ. ಈ ಹಿಂದಿನಂತೆಯೇ 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಮಿತ್ರಕೂಟಗಳು ಪ್ರಚಂಡ ಬಹುಮತ ಪಡೆದು, ಅಧಿಕಾರಕ್ಕೆ ಬರಲಿದೆ ಎಂದರು.

ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಸೋತರೆಂದು ಹತಾಶರಾಗಬಾರದು. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರ ನೇತೃತ್ವದಲ್ಲೇ ಮುಂದಿನ ಎಲ್ಲಾ ಚುನಾವಣೆಗಳನ್ನು ಎದುರಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು ಎಂದು ಸೂಚಿಸಿದರು.

ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಹೋಬಳಿಯಲ್ಲೂ ಸಭೆ ನಡೆಸಲಾಗುವುದು. ಜಿಲ್ಲಾ ಪಂಚಾಯಿತಿ ಚುನಾವಣೆ ಮುಗಿದ ಮೇಲೆ ಕೇಂದ್ರದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು ಧೃತಿಗೆಡದೇ ಪಕ್ಷ ಸಂಘಟನೆ ನಡೆಸಬೇಕು ಎಂದರು.

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಸಂಘಟನೆಗೆ ಎಲ್ಲಾ ಕಾರ್ಯಕರ್ತರು ಕ್ರಿಯಾಶೀಲರವಾಬೇಕು. ತಾಲ್ಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ನಮ್ಮೆಲ್ಲರ ಗುರಿಯಾಗಬೇಕಿದೆ’ ಎಂದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಜಿ.ಚುಂಚೇಗೌಡ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಲಕ್ಷ್ಮಿಪತಿ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿವೆಂಕಟೇಶ್‌,ಜಿಲ್ಲಾ ಘಟಕದ ಅಧ್ಯಕ್ಷೆ ರೇವತಿಅನಂತರಾಮ್, ಸಿ.ಡಿ.ಸತ್ಯನಾರಾಯಣಗೌಡ, ಆರ್‌.ದಯಾನಂದಸ್ವಾಮಿ, ಕೇಶವಮೂರ್ತಿ, ನಾರನಹಳ್ಳಿ ಗೋವಿಂದರಾಜು, ಆರ್‌.ವಿ.ಗೌಡ, ಮಾರಸಂದ್ರ ಮಂಜುನಾಥ್‌, ವಿಜಯಕುಮಾರ್‌, ನರಸಿಂಹಮೂರ್ತಿ, ಕೆ.ಎಂ.ಕೃಷ್ಣಮೂರ್ತಿ, ಬಿ.ಎಚ್‌.ಕೆಂಪಣ್ಣ, ವಿಶ್ವನಾಥರೆಡ್ಡಿ ಇದ್ದರು.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಮೂರು ಬಾರಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿರುವ ಜಿ.ಚುಂಚೇಗೌಡ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು ಹಾಗೂ ಕಾರ್ಯಕರ್ತರು ವೀರಪ್ಪಮೊಯ್ಲಿ ಅವರಿಗೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT