ಆನೇಕಲ್:ಕೊರೊನಾ ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಕೊರೊನಾದಿಂದ ರಕ್ಷಣೆ ಪಡೆಯಲು ಲಸಿಕೆಯೇ ಅಸ್ತ್ರವಾಗಿದೆ. ಹಾಗಾಗಿ, ಪ್ರತಿಯೊಬ್ಬರು ಲಸಿಕೆ ಪಡೆಯಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್ ತಿಳಿಸಿದರು.
ತಾಲ್ಲೂಕಿನ ಕಿತ್ತಗಾನಹಳ್ಳಿಯಲ್ಲಿ ಅಪೋಲೊ ಮತ್ತು ಅತ್ತಿಬೆಲೆ ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ಲಸಿಕೆ ಅಭಿಯಾನ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊರೊನಾದಿಂದಾಗಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹಾಗಾಗಿ ಈ ಕುಟುಂಬಗಳಿಗೆ ನೆರವಾಗಲು ಸರ್ಕಾರ ₹ 1 ಲಕ್ಷ ನೆರವು ಘೋಷಣೆ ಮಾಡಿದೆ. ಕಾರ್ಮಿಕರು, ಬಡ ಕುಟುಂಬಗಳು ಯಾವುದೇ ಸಮಸ್ಯೆಯಿಲ್ಲದೇ ಲಸಿಕೆ ಪಡೆದುಕೊಳ್ಳಲು ಅನುಕೂಲವಾಗಲಿ ಎಂಬ ದೃಷ್ಟಿಯಿಂದ ವಿವಿಧೆಡೆ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಆರ್.ಟಿ. ಅಶೋಕ್ ರೆಡ್ಡಿ ಮಾತನಾಡಿ, ದಾನಿಗಳ ನೆರವಿನಿಂದ ಉಚಿತವಾಗಿ ಲಸಿಕೆ ನೀಡುವ ಸಲುವಾಗಿ ಲಸಿಕೆ ಅಭಿ ಯಾನ ಪ್ರಾರಂಭಿಸಲಾಗಿದೆ ಎಂದರು.