ದೊಡ್ಡಬಳ್ಳಾಪುರ: ಆಮ್ಲಜನಕ ಘಟಕಕ್ಕೆ ಚಾಲನೆ

ದೊಡ್ಡಬಳ್ಳಾಪುರ: ‘ಚಾಮರಾಜನಗರದಲ್ಲಿ ನಡೆದ ಆಮ್ಲಜನಕದ ಕೊರತೆಯಿಂದ ಕೋವಿಡ್ ರೋಗಿಗಳು ಸಾವನ್ನಪ್ಪಿದ್ದ ಘಟನೆ ಮರುಕಳಿಸದಂತೆ ಆಮ್ಲಜನಕ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಒತ್ತು ನೀಡುತ್ತಿರುವುದು ಅಭಿನಂದನೀಯ. ಕಂಪನಿಗಳು ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕಿದೆ’ ಎಂದು ಶಾಸಕ ಟಿ. ವೆಂಕಟರಮಣಯ್ಯ ಹೇಳಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಡೆಲ್ ಟೆಕ್ನಾಲಜಿಸ್ನಿಂದ ನಿರ್ಮಿಸಲಾಗಿರುವ ಆಮ್ಲಜನಕ ಘಟಕವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
‘ಕೋವಿಡ್ ಪರಿಸ್ಥಿತಿಯಲ್ಲಿ ಆಮ್ಲಜನಕ ಸರಬರಾಜು ಮಾಡುವುದು ದೊಡ್ಡ ಸವಾಲಾಗಿತ್ತು. ಚಾಮರಾಜನಗರದಲ್ಲಿ ಆಮ್ಲಜನಕದ ಕೊರತೆಯಿಂದ 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಆದರೆ, ನಂತರದ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ಕಂಪನಿಗಳು ತಮ್ಮ ಸಿಎಸ್ಆರ್ ಅನುದಾನದಡಿ ಆಮ್ಲಜನಕ ಘಟಕ, ಆಸ್ಪತ್ರೆಗಳಿಗೆ ಪರಿಕರಗಳನ್ನು ನೀಡುತ್ತಿರುವುದು ಅಭಿನಂದನೀಯ’
ಎಂದರು.
ಆಸ್ಪತ್ರೆಗಳಲ್ಲಿ ಹೃದಯ ತಪಾಸಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಕೋ ಪರೀಕ್ಷೆ ಸಲಕರಣೆಗಳನ್ನು ಒದಗಿಸುವಂತೆ ಕಂಪನಿಗಳಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಾ ಇ. ರವಿಕುಮಾರ್ ಮಾತನಾಡಿ, ‘ಕಂಪನಿಗಳು ಆರೋಗ್ಯ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆಯಿಂದಾಗಿ ಮೇಕ್ಶಿಫ್ಟ್ನಂತಹ ಆಸ್ಪತ್ರೆ, ಆಮ್ಲಜನಕ ಘಟಕಗಳು ಕಾರ್ಯ ನಿರ್ವಹಿಸಲು ಅನುಕೂಲವಾಗಿದೆ. ಕಂಪನಿಗಳಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇವೆ’ ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಟಿ.ಎಸ್. ಶಿವರಾಜು, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್, ಡೆಲ್ ಕಂಪನಿಯ ಕಾರ್ಯಕ್ರಮ ಸಂಯೋಜಕ ಜೋಸೆಫ್, ವೆಂಕಟ್ ಸೇರಿದಂತೆ ಕಂಪನಿಯ ಸಿಬ್ಬಂದಿ ಹಾಗೂ ನಗರಸಭಾ ಸದಸ್ಯರು ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.