ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬರ ಪರಿಸ್ಥಿತಿ ಪರಿಣಾಮಕಾರಿಯಾಗಿ ನಿರ್ವಹಿಸಿ’

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ
Last Updated 5 ಡಿಸೆಂಬರ್ 2018, 13:52 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಮುಂಬರುವ ದಿನಗಳಲ್ಲಿ ಬರಗಾಲ ಹೆಚ್ಚಾಗಲಿದ್ದು, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚು ಆದ್ಯತೆ ನೀಡುವ ಮೂಲಕ ಬರಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕೆಂದು’ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಸವರಾಜು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಬರಪೀಡಿತ ತಾಲ್ಲೂಕುಗಳಲ್ಲಿ ನರೇಗಾ ಯೋಜನೆಯಡಿ ಹೆಚ್ಚು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರು, ಆಹಾರ, ಪಶುಪಾಲನೆ, ಅರಣ್ಯ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

‘ಜಿಲ್ಲೆಯಲ್ಲಿನ ನೀರಿನ ಸಮಸ್ಯೆ ಕುರಿತು ಚರ್ಚಿಸಿದ ಪ್ರಧಾನ ಕಾರ್ಯದರ್ಶಿ, ತುರ್ತು ಅವಶ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಜೊತೆಗೆ‌ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲು, ಮುಂಬರುವ ಬೇಸಿಗೆಗೆ ಉಪಯೋಗವಾಗುವಂತೆ ಯೋಜನೆ ರೂಪಿಸಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.

‘ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಾಗ, ಜಿಲ್ಲೆಯ ಕೆರೆಗಳ ಸಂರಕ್ಷಣೆಗಾಗಿ ಕೆರೆಗಳ ಪುನಶ್ಚೇತನ, ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಶುದ್ಧ ನೀರು ಘಟಕಗಳ ನಿರ್ವಹಣೆ ಕಡೆಗೂ ಗಮನ ಹರಿಸಬೇಕೆಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾಂತರ ಇಲಾಖೆಯ ವಿದ್ಯಾರ್ಥಿ ನಿಲಯಗಳು, ಭವನಗಳು, ಅಂಗನವಾಡಿ ಕಟ್ಟಡಗಳು, ಆಸ್ಪತ್ರೆಗಳ ನಿರ್ಮಾಣಕ್ಕಾಗಿ ಅವಶ್ಯವಿರುವ ನಿವೇಶನಗಳನ್ನು ಮಂಜೂರು ಮಾಡಬೇಕೆಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

‘ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಪ್ರಧಾನ ಕಾರ್ಯದರ್ಶಿ 94 ಸಿ ಹಕ್ಕು ಪತ್ರ ವಿತರಣೆ, ಪೋಡಿ ಮುಕ್ತ ಗ್ರಾಮ, ರುದ್ರಭೂಮಿ, ರಾಜಕಾಲುವೆ ಹಾಗೂ ಕೆರೆ ಒತ್ತುವರಿ ತೆರವು ಸೇರಿದಂತೆ ಬಾಕಿ ಇರುವ ಕಂದಾಯ ಪ್ರಕರಣಗಳ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಉಪವಿಭಾಗಾಧಿಕಾರಿ, ತಹಶೀಲ್ದಾರ್, ಸರ್ವೇಯರ್‌ಗಳು, ಗ್ರಾಮ ಲೆಕ್ಕಾಧಿಕಾರಿಗಳಿಗೆ ಆದೇಶಿಸಬೇಕೆಂದು ಜಿಲ್ಲಾಧಿಕಾರಿಯವರಿಗೆ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕರೀಗೌಡ, ಕಳೆದ ಎರಡು ವರ್ಷಗಳ ಹಿಂದಿನ ಬಾಕಿ ಇರುವ ಕಂದಾಯ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕಂದಾಯ ಪ್ರಕರಣ ಅರ್ಜಿಗಳ ವಿಲೇವಾರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ’ ಎಂದು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ಲತಾ, ಉಪವಿಭಾಗಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT