ದೇವನಹಳ್ಳಿ: ಸರ್ಕಾರದ ವಿವಿಧ ಇಲಾಖೆಗಳು ನೀಡುವ ಕೌಶಲಾಭಿವೃದ್ಧಿ ತರಬೇತಿ ಪಡೆದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಗ್ರಾಮೀಣ ಮಹಿಳೆಯರು ಮುಂದಾಗಬೇಕು ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಸಲಹೆ ನೀಡಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಖಾದಿ ಮತ್ತು ಗ್ರಾಮೋದ್ಯೋಗ ವಿಭಾಗದಿಂದ ಹಮ್ಮಿಕೊಂಡಿದ್ದ ಗ್ರಾಮೀಣ ಕೈಗಾರಿಕೆ ಸ್ಥಾಪನೆ ಬಗ್ಗೆ ವಿಚಾರ ಸಂಕಿರಣ ಮತ್ತು ಉಚಿತ ಕೌಶಲಾಭಿವೃದ್ಧಿ ಕುರಿತ ಒಂದು ದಿನದ ಅರಿವು ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ವಿವಿಧ ಇಲಾಖೆಗೆ ಒಟ್ಟು ₹ 9 ಕೋಟಿ ಅನುದಾನ ನೀಡಲಾಗಿದೆ. ಸರ್ಕಾರದಿಂದ ಯೋಜಿತವಾದ ತರಬೇತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಸ್ವಯಂ ಉದ್ಯೋಗ ರೂಪಿಸಿಕೊಳ್ಳಲು ಎಲ್ಲರೂ ಮುಂದಾಗಬೇಕು ಎಂದು ಅಭಿಪ್ರಾಯಪಟ್ಟರು.
ಯಂತ್ರೋಪಕರಣಗಳನ್ನು ಬಳಸಿಕೊಂಡು ಆದಾಯ ವೃದ್ಧಿಸಿಕೊಳ್ಳಬೇಕು. ಆರ್ಥಿಕ ಬಲವರ್ಧನೆಯಿಂದ ಜೀವನಕ್ಕೆ ಭದ್ರತೆ ಸೃಷ್ಟಿಗೆ ಇದು ಸಹಕಾರಿಯಾಗಿದೆ ಎಂದು ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕ ನರೇಂದ್ರಬಾಬು ತಿಳಿಸಿದರು.
ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಮುನೇಗೌಡ, ಪುರಸಭೆ ಸದಸ್ಯ ಜಿ.ಎ. ರವೀಂದ್ರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪ ನಿರ್ದೆಶಕ ಮಹಮದ್ ರಫೀಕ್, ನಿರ್ದೇಶಕ ಮುಕುಂದ್, ವೆಂಕಟಗಿರಿ ಕೋಟೆ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ್, ಸದಸ್ಯ ಪ್ರಭಾಕರ್ ಹಾಜರಿದ್ದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ 255, ಜಿಲ್ಲಾ ಪಂಚಾಯಿತಿಯಿಂದ 60, ತಾಲ್ಲೂಕು ಪಂಚಾಯಿತಿಯ ಟಿಎಸ್ಪಿ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ 39 ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.