ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಯೋಜನೆಯಡಿ ಶೀಘ್ರವೇ ಮುಸುಕಿನಜೋಳ, ರಾಗಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಅ. 20ರಂದು ತಾಲ್ಲೂಕು ಕಚೇರಿ ಆವರಣದಲ್ಲಿ ಆಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಸತೀಶ್ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆಯಲ್ಲಿ ಜೋಳ ಹಾಗೂ ರಾಗಿ ಖರೀದಿಸಲು ವರ್ತಕರು ರೈತರ ಬಳಿ ಬೇಕಾಬಿಟ್ಟಿ ಬೆಲೆಗೆ ಕೇಳುತ್ತಿದ್ದಾರೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕುವ ಮೊದಲು ಸರ್ಕಾರ ಖರೀದಿ ಕೇಂದ್ರ ತೆರೆದು ರೈತರ ನೆರವಿಗೆ ಧಾವಿಸಬೇಕಿದೆ ಎಂದರು.
ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಪ್ರಧಾನ ಕಾರ್ಯದರ್ಶಿ ಸತೀಶ್, ರವಿ ಶಿರವಾರ, ಮುತ್ತೇಗೌಡ, ಹರೀಶ್, ಮಹದೇವ್ ಹಾಜರಿದ್ದರು.