ದೇವನಹಳ್ಳಿ: ವಿಧಾನಸೌಧ ಚಲೋಗೆ ಬುಧವಾರ ಲಾಠಿ ಹಿಡಿದು ರೈತರು ಬೆಂಗಳೂರಿನತ್ತ ನಡೆದರು.
ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಕೆ. ಶಿವಪ್ಪ ಮಾತನಾಡಿ, ಕಳೆದ ಮೂರು ತಿಂಗಳಿಂದ ರೈತರು ವಿಭಿನ್ನ ರೀತಿಯಲ್ಲಿ ಚಳವಳಿ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಿರುವಾಗ ಬಿಜೆಪಿಯ ಕೆಲವು ಸಚಿವರು ಮತ್ತು ಮುಖಂಡರು ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿರುವವರು ರೈತರಲ್ಲ ಬಾಡಿಗೆ ಗೂಂಡಾಗಳು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದು ಸರ್ಕಾರಕ್ಕೆ ರೈತರ ಮೇಲಿರುವ ಕಾಳಜಿ ತೋರಿಸುತ್ತಿದೆ ಎಂದು ದೂರಿದರು.
ರೈತ ಸಂಘ ರಾಜ್ಯ ಘಟಕದ ಉಪಾಧ್ಯಕ್ಷ ವೆಂಕಟನಾರಾಯಣಪ್ಪ, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ್, ಕರವೇ (ಚಲಪತಿ ಬಣ) ರಾಜ್ಯ ಘಟಕದ ಗೌರವಾಧ್ಯಕ್ಷ ಚಂದ್ರಶೇಖರ್, ಮುಖಂಡ ಅಣ್ಣಯ್ಯಪ್ಪ ಉಪಸ್ಥಿತರಿದ್ದರು.