ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಕೆಪಿಟಿಸಿಎಲ್‌ ವಿರುದ್ಧ ಹೋರಾಟ

ನಿಯಮ ಪಾಲಿಸದೆ ವಿದ್ಯುತ್‌ ಕಂಬ ಅಳವಡಿಕೆ
Last Updated 4 ಅಕ್ಟೋಬರ್ 2021, 3:48 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಕಸಬಾ ಹೋಬಳಿಯ ತಳಗವಾರ, ಕೋಳೂರು,ಕಂಟನಕುಂಟೆ ಗ್ರಾಮಗಳ ಮೂಲಕ ಹಾದು ಹೋಗಿದ್ದ ಅಲ್ಪ ಪ್ರಮಾಣದ ವಿದ್ಯುತ್‌ ಲೈನ್‌ಗೆ ಬದಲಾಗಿ ಬೃಹತ್‌ ಕಂಬಗಳು ಹಾಗೂ ಲೈನ್‌ ಅಳವಡಿಸಲು ಮುಂದಾಗಿರುವ ಕೆಪಿಟಿಸಿಎಲ್‌ ಕ್ರಮದ ವಿರುದ್ಧ ಹೋರಾಟ ರೂಪಿಸಲು ಅ.4ರಂದು ಸಂಜೆ ತಳಗವಾರದಲ್ಲಿ ಗ್ರಾಮ ಸಭೆ ನಡೆಸಲು ರೈತರು ನಿರ್ಧರಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಗೌಡ, ಜಿಲ್ಲಾ ಅಧ್ಯಕ್ಷ ಪ್ರಸನ್ನ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್‌, ರುದ್ರಪ್ಪ,ವಿಶ್ವನಾಥ್‌, ರೈತರಿಗೆ ಈಗ ಇರುವುದೇ ತುಂಡು ಭೂಮಿ. ಇಂತಹ ಅಲ್ಪಸ್ವಲ್ಪ ಕೃಷಿ ಭೂಮಿಯಲ್ಲಿ ಬೃಹತ್‌ ಗಾತ್ರದ ವಿದ್ಯುತ್‌ ಕಂಬ ಅಳವಡಿಸಿದರೆ ಕೃಷಿ ಮಾಡಲು ಸಾಧ್ಯವಾಗುವುದಿಲ್ಲ ಎಂದರು.

ವಿದ್ಯುತ್‌ ಕಂಬ ಅಳವಡಿಸಲು ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ರೈತರಿಗೆ ಯಾವುದೇ ಮಾಹಿತಿ ನೀಡದೆ ಕಂಬ ಅಳವಡಿಸಲು ಗುಂಡಿ ತೋಡುತ್ತಿರುವುದು ಖಂಡನೀಯ. ಭೂಮಿ ಕಳೆದುಕೊಳ್ಳುವ ರೈತರಿಗೆ ನಿಯಮದ ಪ್ರಕಾರ ಸೂಕ್ತ ಪರಿಹಾರ ನೀಡದೆ ಹಾಗೂ ರೈತರ ಅನುಮತಿ ಇಲ್ಲದೆ ಜಮೀನಿಗೆ ಪ್ರವೇಶ ಮಾಡುವವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದರು.

‌ವಿದ್ಯುತ್‌ ಇಲ್ಲದೆ ಯಾವುದೇ ಕೆಲಸ ಸಾಧ್ಯ ಇಲ್ಲ ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿಯೇ. ಅಭಿವೃದ್ಧಿಗೆ ಸಹಕಾರ ಸದಾ ಇರಲಿದೆ. ಆದರೆ, ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರ ನೀಡದೆ ಯಾರದೋ ಪ್ರಗತಿಗೆ ನಾವೇಕೆ ತ್ಯಾಗ ಮಾಡಬೇಕು ಎಂದು ಪ್ರಶ್ನಿಸಿರುವ ರೈತರು, ಸೋಮವಾರದಿಂದ ವಿದ್ಯುತ್‌ ಕಂಬ ಅಳವಡಿಕೆಗೆ ಜಮೀನು ಕಳೆದುಕೊಳ್ಳುವ ಗ್ರಾಮಗಳಲ್ಲಿ ಸಭೆ ನಡೆಸಲಾಗುವುದು. ನಂತರ ಒತ್ತಾಯ ಕುರಿತಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಕೆಪಿಟಿಸಿಎಲ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಕೇಳಿಕೊಳ್ಳಲಾಗುವುದು. ಈ ಹಿಂದೆ ತಾಲ್ಲೂಕಿನಲ್ಲಿ ಬೃಹತ್‌ ವಿದ್ಯುತ್‌ ಕಂಬ ಅಳವಡಿಸುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಮೂಲಕ ಸರ್ವೇ ನಡೆಸಿ ಪರಿಹಾರ ನೀಡಲಾಗಿದೆ. ಈ ಬಾರಿಯೂ ನಿಯಮಗಳ ಪ್ರಕಾರ ಪರಿಹಾರ ನೀಡದೆ ಕಂಬ ಅಳವಡಿಕೆಗೆ ಮುಂದಾದರೆ ಅವಕಾಶ ನೀಡದೆ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT