ವಿಜಯಪುರ: ತೀವ್ರ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆ ಅನುಭವಿಸುತ್ತಿರುವ ರೈತರಿಗೆ ನೆರವಾಗಲು ಜಿಲ್ಲಾಧಿಕಾರಿ ಆದೇಶದ ಮೇರೆಗೆ ತಾಲ್ಲೂಕಿನಲ್ಲಿ ಮೇವಿನ ಬ್ಯಾಂಕ್ ತೆರೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಶು ಸಂಗೋಪಾನಾ ಇಲಾಖೆ ಪ್ರಭಾರ ಉಪನಿರ್ದೇಶಕ ಡಾ.ನಾರಾಯಣಸ್ವಾಮಿ ಹೇಳಿದರು.
ಜಾನುವಾರುಗಳಿಗೆ ಮೇವು, ನೀರು ಕೊರತೆ ಆಗದಂತೆ ಎಚ್ಚರ ವಹಿಸಲಾಗುವುದು. ದೇವನಹಳ್ಳಿ, ಕಾರಹಳ್ಳಿ, ಚನ್ನರಾಯಪಟ್ಟಣ ಹೋಬಳಿ ನಲ್ಲೂರು, ವಿಜಯಪುರ ಹೋಬಳಿ ಮಂಡಿಬೆಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಾನುಕುಂಟೆಯಲ್ಲಿ ಮೇವಿನ ಬ್ಯಾಂಕ್ ತೆರೆಯಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 1.83 ಲಕ್ಷ ಜಾನುವಾರುಗಳಿವೆ. ಅವುಗಳಿಗೆ ದಿನಕ್ಕೆ ತಲಾ 5ಕೆ.ಜಿಯಂತೆ ಮೇವು ವಿತರಣೆ ಮಾಡಲಾಗುತ್ತಿದೆ. ರೈತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಗ್ರಾಮ ಲೆಕ್ಕಾಧಿಕಾರಿ ಸುನೀಲ್ ಮಾತನಾಡಿ, ಜೂನ್ 7ಕ್ಕೆ ಮುಂಗಾರು ಕೇರಳಕ್ಕೆ ಪ್ರವೇಶವಾಗುವುದರಿಂದ ಈ ಬಾರಿಯೂ ಮಳೆ ಪ್ರಮಾಣದಲ್ಲಿ ಕಡಿಮೆಯಾಗುವ ನಿರೀಕ್ಷೆ ಇದೆ. ಜನರಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ಮಾಡಲು ಕಂದಾಯ ಇಲಾಖೆ ಸನ್ನದ್ಧವಾಗಿದೆ ಎಂದರು.