ದೇವನಹಳ್ಳಿ: ಇಲ್ಲಿನ ನಂದಿಬೆಟ್ಟ ರಸ್ತೆಯ ಕೊಡಗುರ್ಕಿ ಬಳಿ ಇರುವ ಪ್ರೆಸ್ಟೀಜ್ ಗಾಲ್ಫ್ ಶೈರ್ನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್ನಲ್ಲಿ ಡಿ. 11ರಿಂದ 18ರ ವರೆಗೆ ಜಿ20 ಶೃಂಗಸಭೆ ನಡೆಯಲಿದ್ದು, ಕಾರ್ಯಕ್ರಮದ ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸಭೆಯ ಅಂಗವಾಗಿ ವಿದೇಶಗಳಿಂದ ರಾಯಭಾರಿಗಳು, ಗಣ್ಯರು, ಮುಖ್ಯ ಅತಿಥಿಗಳು, ರಾಜ್ಯ, ಕೇಂದ್ರದ ಸಚಿವರು, ಕಾರ್ಯದರ್ಶಿಗಳು ವಾಸ್ತವ್ಯ ಹೂಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೋಟೆಲ್ನ ಸುರಕ್ಷತೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.
ಭದ್ರತೆ ದೃಷ್ಟಿಯಿಂದ ಯಾವೆಲ್ಲ ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳು, ಹೋಟೆಲ್ ವ್ಯವಸ್ಥಾಪಕರು ಹಾಗೂ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಅವರೊಂದಿಗೆ ಸಭೆ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿದರು.