ಚೆನ್ನೈ: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿ ಐಪಿಎಲ್ ಕ್ರಿಕೆಟ್ ಪಂದ್ಯಗಳಿಗೆ ಬಹಿಷ್ಕಾರ ಹಾಕಲು ರಾಜಕೀಯ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಸುಮಾರು 350 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾನಿರತರು ಕ್ರೀಡಾಂಗಣಕ್ಕೆ ನುಗ್ಗದಂತೆ ತಡೆಯಲು ಸುಮಾರು 4 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯೂ (ಆರ್ಎಎಫ್) ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ಕ್ರೀಡಾಂಗಣದ ಸಮೀಪದ ಅಣ್ಣಾ ಸಲೈ ಮುಖ್ಯ ರಸ್ತೆ ಪ್ರವೇಶಿಸಿದ್ದಾರೆ. ಕ್ರಿಂಡಾಂಗಣದತ್ತ ಜಾಥಾ ನಡೆಸಲು ಮುಂದಾದ ಅವರನ್ನು ತಡೆಯಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದೂ ಮೂಲಗಳು ಹೇಳಿವೆ.
ರಾತ್ರಿ 8 ಗಟೆಗೆ ಆರಂಭವಾಗಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತ ನೈಟ್ ರೈಡರ್ಸ್ನ ಸವಾಲು ಎದುರಿಸಲಿದೆ.