ನಂಬಿಕೆ, ಶ್ರದ್ಧೆಯಿಂದ ಸಮಾಜಕ್ಕೆ ಒಳಿತು

ಹೊಸಕೋಟೆ: ನಗರದ ಕೋಟೆಯಲ್ಲಿರುವ ಖಿಲ್ಲೆ ಆಂಜನೇಯ ದೇವಾಲಯದಲ್ಲಿ ಸೋಮವಾರ ಹನುಮ ಜಯಂತಿ ಕಾರ್ಯಕ್ರಮ ನಡೆಯಿತು.
ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ.ಎನ್. ಬಚ್ಚೇಗೌಡ ಮಾತನಾಡಿ, ‘ನಗರದ ವ್ಯಾಪ್ತಿಯಲ್ಲಿ ನೂರಾರು ದೇವಾಲಯಗಳಿವೆ. ಈ ಪೈಕಿ ಕೆಲವು ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದಿವೆ. ಅವುಗಳ ಜೀರ್ಣೋದ್ಧಾರ ಮಾಡಿ ಭಕ್ತರಿಗೆ ಅನುಕೂಲ ಮಾಡಿಕೊಡಲಾಗಿದೆ’ ಎಂದರು.
ಕೋಟೆಯ ಖಿಲ್ಲೆ ಆಂಜನೇಯ ದೇವಾಲಯವು 350 ವರ್ಷಗಳ ಹಿಂದೆ ಚೋಳರು ನಿರ್ಮಾಣ ಮಾಡಿರುವುದಾಗಿ ಇತಿಹಾಸ ಹೇಳುತ್ತದೆ. 20 ವರ್ಷಗಳ ಹಿಂದೆ ಸ್ಥಳೀಯ ಯುವಕರು ಮರಿಯಪ್ಪ ಅವರ ನೇತೃತ್ವದಲ್ಲಿ ದೇವಾಲಯವನ್ನು ಅಭಿವೃದ್ಧಿಗೊಳಿಸಿ ಪ್ರತಿನಿತ್ಯ ಪೂಜೆ ನಡೆಯುವಂತೆ ಮಾಡಿದ್ದಾರೆ ಎಂದು ಸ್ಮರಿಸಿದರು.
ಹಿಂದೂಗಳಿಗೆ ದೇವಾಲಯಗಳು ಶ್ರದ್ಧಾ ಕೇಂದ್ರಗಳಾಗಿವೆ. ಇತ್ತೀಚೆಗೆ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗುತ್ತಿದೆ. ದೇವರ ಬಗ್ಗೆ ನಂಬಿಕೆ, ಶ್ರದ್ಧೆ ಹೆಚ್ಚಾದರೆ ಸಮಾಜವೂ ಒಳ್ಳೆಯ ರೀತಿಯಲ್ಲಿ ಇರುತ್ತದೆ ಎಂದರು.
ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿದರು. ಪೂಜಾ ಕಾರ್ಯಕ್ರಮದಲ್ಲಿ ಮುಖಂಡರಾದ ಸಿ. ಬೈರೇಗೌಡ, ವಿಜಯ್ ಕುಮಾರ್, ಮಂಜುನಾಥ್, ಉದಯ್ ಅಯ್ಯರ್ ಸೇರಿದಂತೆ ಭಕ್ತರು ಭಾಗವಹಿಸಿದ್ದರು. ನಾಗರಿಕರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.