ವಿಜಯಪುರ: ‘ಜೆಡಿಎಸ್ ಪಕ್ಷಕ್ಕೆ ಉತ್ತಮ ಭವಿಷ್ಯ ತಂದುಕೊಡುವಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಸಫಲರಾಗುತ್ತಾರೆ’ ಎಂದು ಜೆಡಿಎಸ್ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಶ್ವಥಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಬುಧವಾರ ಜೆಡಿಎಸ್ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನ ಆಚರಣೆ ಮಾಡಿದ ಬಳಿಕ ಅವರು ಮಾತನಾಡಿದರು.
‘ಕುಮಾರಸ್ವಾಮಿ ಅವರ 20 ತಿಂಗಳ ಅಧಿಕಾರಾವಧಿಯಲ್ಲಿ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಇಂದಿಗೂ ಜನರ ಮನಸ್ಸಿನಲ್ಲಿವೆ. ಅವರೊಬ್ಬ ಉತ್ತಮ ನಾಯಕರಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಉತ್ತಮ ಚೇತರಿಕೆ ನೀಡಲಿದ್ದಾರೆ’ ಎಂದರು.
ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶಿವಪ್ಪ ಮಾತನಾಡಿ, ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಸಂಬಂಧ ಅವರು ಕೈಗೊಳ್ಳುತ್ತಿರುವ ಕೆಲವು ನಿರ್ಧಾರಗಳಲ್ಲಿ ಪಕ್ಷ ಹಾಗೂ ರೈತರ ಹಿತ ಅಡಗಿದೆ. ಈ ಬಗ್ಗೆ ಯಾರೂ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ ಎಂದರು.
ಮುಖಂಡರಾದ ಮಹೇಶ್ ಕುಮಾರ್, ಜೆ.ಆರ್. ಮುನಿವೀರಣ್ಣ, ಸಿ. ಮುನಿಯಪ್ಪ, ಹರೀಶ್, ಕೆ. ಮುನಿರಾಜು, ಟಿಪ್ಪು ಸಂಘದ ಟೌನ್ ಅಧ್ಯಕ್ಷ ಸಮೀರ್, ಲೋಕೇಶ್, ಹರೀಶ್ ಇದ್ದರು.