ಆನೇಕಲ್:ತಾಲ್ಲೂಕಿನ ಶಾಂತಿಪುರ ಗ್ರಾಮ ಪಂಚಾಯಿತಿ ಮತ್ತು ವೈದೇಹಿ ಆಸ್ಪತ್ರೆ ಸಹಯೋಗದಡಿ ಚೂಡಸಂದ್ರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿದ ಶಾಸಕ ಬಿ. ಶಿವಣ್ಣ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿವಿಧ ಕಾರಣಗಳಿಂದ ಆರೋಗ್ಯದ ಸಮಸ್ಯೆಗಳು ಉಂಟಾಗುತ್ತಿವೆ. ಈ ಸಮಸ್ಯೆಗಳನ್ನು ಪ್ರಾರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆದರೆ ರೋಗಗಳಿಂದ ಮುಕ್ತರಾಗಬಹುದು. ಇಲ್ಲವಾದರೆ ಕ್ಲಿಷ್ಟಕರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಹಾಗಾಗಿ, ನಿಯಮಿತವಾಗಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದರಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದರು.
ಶಾಂತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ರಘುನಾಥ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳಿಂದ ಜನರ ಆರೋಗ್ಯದ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ಜನರು ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಉತ್ತಮ ವೇದಿಕೆಯಾಗಿವೆ ಎಂದು ತಿಳಿಸಿದರು.
ಶಾಂತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಜನಸಂಖ್ಯೆಯಿದೆ. ಕಾರ್ಮಿಕರು ಹೆಚ್ಚಾಗಿದ್ದಾರೆ. ಹಾಗಾಗಿ, ಈ ಭಾಗಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಬೇಕು. ಈ ಮೂಲಕ ಗ್ರಾಮೀಣರ ಆರೋಗ್ಯದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಪಂಚಾಯಿತಿ ಉಪಾಧ್ಯಕ್ಷ ಮದನ್ ಮಾತನಾಡಿ, ಗ್ರಾಮದ 500ಕ್ಕೂ ಹೆಚ್ಚು ಮಂದಿಯ ಆರೋಗ್ಯ ತಪಾಸಣೆ ನಡೆಸಲಾಗಿದೆ. ಶಿಬಿರದಲ್ಲಿ ಹೃದಯ, ನರರೋಗ, ಸ್ತ್ರೀರೋಗ, ಇಎನ್ಟಿ ಸೇರಿದಂತೆ ವಿವಿಧ ರೋಗಗಳ ತಪಾಸಣೆ ನಡೆಸಲಾಯಿತು. ಆರೋಗ್ಯ ಶಿಬಿರವನ್ನು ಗ್ರಾಮೀಣ ಜನತೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದುತಿಳಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಪಾರಿಜಾತ ದೊರೆಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಕಲಾ ಹರೀಶ್, ಮೋಹನ್ ದಾಸ್, ಮಧು, ರಮೇಶ್, ಮುಖಂಡರಾದ ಅಶೋಕ್ ರೆಡ್ಡಿ, ಶಿವ, ನವೀನ್, ಸುದೀಪ್, ಶ್ರೀನಿವಾಸ್, ಕುಮಾರ್, ಅರ್ಜುನ್ ಹಾಜರಿದ್ದರು.