ಬೆಂಗಳೂರು: ನಾಗರಿಕ ಸೌಲಭ್ಯಗಳಿಗೆ(ಸಿಎ) ಮೀಸಲಿರಿಸಿದ ಜಾಗವನ್ನು ರಿಯಲ್ ಎಸ್ಟೇಟ್ ಸಂಸ್ಥೆಗೆ ಗುತ್ತಿಗೆ ಆಧಾರದಲ್ಲಿ ನೀಡಿದ ಪ್ರಕರಣದಲ್ಲಿ ಇಬ್ಬರು ಅಧಿಕಾರಿಗಳ ವಿರುದ್ಧ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿತು.
ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಿದ್ದ ಎನ್.ಕೃಷ್ಣಪ್ಪ ಮತ್ತು ಎನ್.ರಾಮಮೂರ್ತಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದೋಷಾರೋಪಪಟ್ಟಿ ಸಲ್ಲಿಸಿತ್ತು.
‘ವಿಚಾರಣೆ ನಡೆಸಲು ಪೂರ್ವಾನುಮತಿ ಅಗತ್ಯವಿದೆ’ ಎಂದು ಅರ್ಜಿದಾರರು ವಾದಿಸಿದ್ದು, ‘ಕಚೇರಿ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಪೂರ್ವಾನುಮತಿ ಅಗತ್ಯ ಇಲ್ಲ’ ಎಂಬ ಸುಪ್ರೀಂ ಕೋರ್ಟ್ ಆದೇಶವನ್ನು ನ್ಯಾಯಮುರ್ತಿ ಎಚ್.ಪಿ. ಸಂದೇಶ್ ಉಲ್ಲೇಖಿಸಿದರು.
ಗ್ರಾಮ ಪಂಚಾಯಿತಿಗೆ ಸೇರಿದ ಎರಡು ಜಾಗಗಳನ್ನು ನಾಗರಿಕ ಸೌಲಭ್ಯಕ್ಕಾಗಿ ಮೀಸಲಿರಿಸಲಾಗಿತ್ತು. ಆದರೆ, ಕ್ಲಬ್ ಹೌಸ್ ನಿರ್ಮಿಸಲು ಭೂಮಿ ಕೋರಿಫೋರ್ಟಿಯಸ್ ಲ್ಯಾಂಡ್ ಡೆವಲಪರ್ಸ್ ಸಂಸ್ಥೆ ಅರ್ಜಿ ಸಲ್ಲಿಸಿತ್ತು. 2016ರಲ್ಲಿ 30 ವರ್ಷಗಳ ಗುತ್ತಿಗೆಗೆ ನೀಡಲಾಯಿತು.
ಗ್ರಾಮಸ್ಥರಿಂದ ಬಂದ ದೂರುಗಳನ್ನು ಆಧರಿಸಿ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಅವರು ಎಸಿಬಿ ತನಿಖೆಗೆ ಆದೇಶಿಸಿದ್ದರು. ಗುತ್ತಿಗೆ ಪತ್ರ ರದ್ದುಗೊಳಿಸಿದ್ದರು. ತಾಲ್ಲೂಕು ಪಂಚಾಯಿತಿಯಿಂದ ಅನುಮೋದನೆ ಪಡೆದಿಲ್ಲ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿತ್ತು.