ಹೊಸಕೋಟೆ: ಸೂಲಿಬೆಲೆ ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆಶಾ ಕಾರ್ಯಕರ್ತೆಯರ ಸಹಯೋಗದಲ್ಲಿ ಸೂಲಿಬೆಲೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ಈ ವೇಳೆ ಮಾತನಾಡಿದ ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಿರಣ್, ವಾತಾವರಣ ವೈಪರೀತ್ಯದಿಂದ ಉಂಟಾಗುವ ಚಳಿ ಮತ್ತು ಜ್ವರ ಲಕ್ಷಣ ಕಂಡು ಬಂದರೆ ಕೂಡಲೇ ವೈದ್ಯಕೀಯ ಪರೀಕ್ಷೆ ಒಳಗಾಗಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಮಳೆಯಿಂದಾಗಿ ನಿಂತ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಳವಾಗಿದೆ. ಚಿಕುನ್ ಗುನ್ಯ, ಡೆಂಗಿ ಅಂತಹ ಮತ್ತಿತರ ಸಾಂಕ್ರಾಮಿಕ ರೋಗ ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ನಿರ್ಲಕ್ಷ್ಯ ತೋರದೆ ತುರ್ತು ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
ಸಿಮೆಂಟ್ ತೊಟ್ಟಿ, ಪ್ಲಾಸ್ಟಿಕ್ ಡ್ರಂ, ಬಕೆಟ್, ಬ್ಯಾರಲ್, ಖಾಲಿ ಡಬ್ಬ ಮತ್ತು ಹಳೆಯ ಟೈರಗಳಲ್ಲಿ ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಸೊಳ್ಳೆಗಳಿಂದ ಹೆಚ್ಚಿನ ಅಪಾಯವಿದ್ದು, ಮನೆಗಳ ಬಳಿ ಈ ರೀತಿಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕೆಂದು ಸಲಹೆ ನೀಡಿದರು.
ಅಯುಷ್ ವೈದ್ಯೆ ಡಾ.ಸಂಧ್ಯಾ, ಪ್ರಭಾವತಿ, ಬಾಲಾಜಿ, ವೆಂಕಟೇಶ್, ಹೊನ್ನನಾಗಮ್ಮ, ಕವಿತಾ, ಕಾಳಮ್ಮ, ಕರೆಬಸಮ್ಮ, ಸುಕನ್ಯಾ, ಶಿಲ್ಪಾ, ಮುನಿರತ್ನ, ಶ್ಯಾಮಲ, ರತ್ನಮ್ಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.