ಸೂಲಿಬೆಲೆ: ‘ಸರ್ಕಾರ ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಸುಲಭವಾಗಿ ದೊರಕುವ ಹಾಗೆ ಮಾಡಲು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದೆ. ವಸತಿ ನಿಲಯದ ಮೇಲ್ವಿಚಾರಕರು ಒಳ್ಳೆಯ ಪರಿಸರವನ್ನು ನಿರ್ಮಿಸಿ, ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಳ್ಳಬೇಕು’ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಸೂಲಿಬೆಲೆ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಅಂದಾಜು ₹ 34 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
‘ವಸತಿ ನಿಲಯವನ್ನು ಅಚ್ಚುಕಟ್ಟಾಗಿ ಇಟ್ಟುಕೊಳ್ಳಬೇಕು. ಸರಿಯಾಗಿ ನಿರ್ವಹಣೆ ಮಾಡಬೇಕು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ವಸತಿ ನಿಲಯದಲ್ಲಿ ಕಾಣುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಶರತ್ ಬಚ್ಚೇಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆವರಣದಲ್ಲಿರುವ ಖಾಲಿ ಜಾಗದಲ್ಲಿ ಸಸಿಗಳನ್ನು ನೆಡಲು ಸೂಚಿಸಿದರು. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಹೇಳಿದರು.
ಟಿಎಪಿಸಿಎಂಎಸ್ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ನಿರ್ದೇಶಕರಾದ ತಮ್ಮೇಗೌಡ, ಗ್ರಾ.ಪಂ.ಸದಸ್ಯ ಜನಾರ್ಧನ್ ರೆಡ್ಡಿ, ತಾ.ಪಂ.ಸದಸ್ಯ ಡಿ.ಟಿ.ವೆಂಕಟೇಶ್, ಹಸಿಗಾಳ ಜಗದೀಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ ಇದ್ದರು.