ದೇವನಹಳ್ಳಿ/ವಿಜಯಪುರ: ದೇವನಹಳ್ಳಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಧ್ವಜಾರೋಹಣ ನಂತರ ಸಚಿವ ಡಾ.ಕೆ.ಸುಧಾಕರ್ ಭಾಷಣಕ್ಕೆ ನೂರಾರು ರೈತರು ಅಡ್ಡಿಪಡಿಸಲು ಯತ್ನಿಸಿದರು.
ಭೂಸ್ವಾಧಿನ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಮೌನ ಪ್ರತಿಭಟನೆ ಮಾಡುತ್ತ ವೇದಿಕೆಗೆ ನುಗ್ಗಲು ಯತ್ನಿಸಿದ ರೈತರನ್ನು ಪೊಲೀಸರು ತಡೆದಾಗ ಜಟಾಪಟಿ ನಡೆಯಿತು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು.50ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
ಭೂಸ್ವಾಧೀನ ವಿರೋಧಿಸಿ 134 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರುಬಾಯಿಗೆ ಕಪ್ಪುಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು.ಪ್ರತಿಭಟನೆ ನಡೆಸದಂತೆ ಪೊಲೀಸರು ಮನವೊಲಿಸಲು ನಡೆಸಿದ ಯತ್ನ ವಿಫಲವಾಗಿತ್ತು.
ಸ್ವಾತಂತ್ರ್ಯ ಉತ್ಸವಕ್ಕೆ ಅಡ್ಡಿಪಡಿಸುತ್ತಾರೆ ಎಂಬ ಕಾರಣಕ್ಕೆ ಚನ್ನರಾಯಪಟ್ಟಣದ ರೈತರ ಮನೆಗಳಿಗೆ ಬೆಳಗಿನ ಜಾವ ಪೊಲೀಸರು ಹಲವರನ್ನು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಹಲವು ರೈತರಿಗೆ ಗಾಯಗಳಾಗಿವೆ.
ಈ ಘಟನೆಯನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿ ಸಾಮಾಜಿಕಮಾಧ್ಯಮಗಳಲ್ಲಿ ಹರಿಬಿಡಲಾಗಿದ್ದು, ಸರ್ಕಾರದ ನಡೆಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ.