ದೊಡ್ಡಬಳ್ಳಾಪುರ:ರಾಜ್ಯದಲ್ಲಿ ತಲೆದೋರಿರುವ ನೆರೆ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಕೂಡಲೇ ಪ್ರವಾಹಕ್ಕೆ ಸಿಲುಕಿರುವ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ)ಯಿಂದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಕರವೇ ತಾಲ್ಲೂಕು ಅಧ್ಯಕ್ಷ ಡಿ.ಎನ್. ಮಂಜುನಾಥ್ ಮಾತನಾಡಿ, ಒಕ್ಕೂಟ ವ್ಯವಸ್ಥೆಯಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಕರ್ನಾಟಕವನ್ನು ಕಡೆಗಣಿಸುತ್ತಲೇ ಬಂದಿವೆ. ರಾಜ್ಯದಲ್ಲಿ ಈಗ ಅತಿವೃಷ್ಟಿಯಾಗಿದೆ. ಇಂತಹ ಸಮಯದಲ್ಲಿಯೂ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬಂದಿಲ್ಲ ಎಂದು ದೂರಿದರು.
ಪ್ರತಿಭಟನೆಯಲ್ಲಿ ಕರವೇ ತಾಲ್ಲೂಕು ಉಪಾಧ್ಯಕ್ಷ ಕೃಷ್ಣಪ್ಪ, ನಗರ ಉಪಾಧ್ಯಕ್ಷ ಡಿ.ಜಿ. ಬಾಬು, ಕಾರ್ಮಿಕ ಘಟಕದ ರವಿಕುಮಾರ್, ನಗರ ಕಾರ್ಯದರ್ಶಿ ಬಾಲು, ಮುಖಂಡರಾದ ಜೋಗಿ, ನಾಗೇಶ್, ಕುಮಾರ್ ಪಾಲ್ಗೊಂಡಿದ್ದರು.