ದೊಡ್ಡಬಳ್ಳಾಪುರ: ರೈತ ವಿರೋಧಿ ನೀತಿಗಳನ್ನು ಕೈ ಬಿಡುವಂತೆ ಒತ್ತಾಯಿಸಿ ದೇಶದಾದ್ಯಂತ ರೈತಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ಕಾರ್ಯಕರ್ತರು ನಗರದ ಕೇಂದ್ರ ಅಂಚೆ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ಕನ್ನಡಿಗರ ಬಣದ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್. ಚಂದ್ರಶೇಖರ್, ರೈತ ವಿರೋಧಿ ನೀತಿಗಳನ್ನು ಕೇಂದ್ರ ಸರ್ಕಾರ ರೈತ ಪರವಾಗಿವೆ ಎಂದು ಸಮರ್ಥಿಸಿಕೊಳ್ಳುವ ಹಾದಿಯಲ್ಲೇ ಸಾಗುತ್ತಿದೆ ಎಂದು ದೂರಿದರು.
ರೈತರ ಹೋರಾಟಕ್ಕೆ ಕನಿಷ್ಠ ಸ್ಪಂದನೆ ನೀಡಲು ಮುಂದಾಗಿಲ್ಲ. ಕಾರ್ಪೊರೇಟ್ ಕಂಪನಿಗಳ ಪರವಾಗಿ ಜಾರಿಗೆ ತಂದಿರುವ ಕಾಯ್ದೆಗಳು ರೈತರನ್ನು ಈಸ್ಟ್ ಇಂಡಿಯಾ ಕಂಪನಿಗಳಂತೆ ಹೊಸ ಹೆಸರಿನಲ್ಲಿ ಒತ್ತೆಯಾಳುಗಳಾಗಿ ದುಡಿಯುವಂತೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ರಮೇಶ್, ಜಿಲ್ಲಾ ಘಟಕದ ಅಧ್ಯಕ್ಷ ಹರ್ಷ, ಕಾರ್ಮಿಕ ಘಟಕದ ಅಧ್ಯಕ್ಷ ಅಪ್ಪಣ್ಣ, ಶಿವಶಂಕರಪ್ಪ, ಪ್ರದೀಪ್, ಜಯರಾಂ ಇದ್ದರು.