ವಿಜಯಪುರ (ದೇವಹಳ್ಳಿ): ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಗೆಲುವಿಗಾಗಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಯೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದು ಪಕ್ಷದ ಹಿರಿಯ ಮುಖಂಡ ಎಸ್. ಭಾಸ್ಕರ್ ಹೇಳಿದರು.
ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದು ಚುನಾವಣೆಗೆ ಮಾತ್ರವಲ್ಲ, ಶಾಶ್ವತವಾದ ಮೈತ್ರಿಯಾಗಿದೆ. ರಾಜ್ಯದ ನಾಯಕರು ಕೊಡುವ ಸೂಚನೆಗಳನ್ನು ಪಕ್ಷದ ಹಿತದೃಷ್ಟಿಯಿಂದ ಪಾಲನೆ ಮಾಡುವುದು ನಮ್ಮ ಕರ್ತವ್ಯ. ಆದ್ದರಿಂದ ನಾವು ಬಿಜೆಪಿಯೊಂದಿಗೆ ಸೇರಿ, ಮೈತ್ರಿ ಅಭ್ಯರ್ಥಿಯ ಪರವಾಗಿ ಮನೆ, ಮನೆಗೆ ಹೋಗಿ ಮತ ಕೇಳುತ್ತೇವೆ ಎಂದರು.
ಬಿಜೆಪಿ ಜಿಲ್ಲಾ ಮುಖಂಡ ಗಿರೀಶ್ ಆರಾಧ್ಯ, ಟೌನ್ ಜೆಡಿಎಸ್ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಹೇಶ್, ಟೌನ್ ಬಿಜೆಪಿ ಅಧ್ಯಕ್ಷ ಆರ್.ಸಿ.ಮಂಜುನಾಥ್, ಕಾರ್ಯದರ್ಶಿ ಡಿ.ಎಂ.ಮುನೀಂದ್ರ, ಚಿ.ಮಾ.ಸುಧಾಕರ್, ನಾರಾಯಣಸ್ವಾಮಿ, ಇದ್ದರು.