ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ, ಶಾಲಾ ಆವರಣದಲ್ಲಿ ಕೈತೋಟ ನಿರ್ಮಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ
Last Updated 12 ಜುಲೈ 2019, 14:00 IST
ಅಕ್ಷರ ಗಾತ್ರ

ದೇವನಹಳ್ಳಿ:‘ಅಂಗನವಾಡಿ ಕೇಂದ್ರ ಹಾಗೂ ಸರ್ಕಾರಿ ಶಾಲೆಗಳ ಅಂಗಳದಲ್ಲಿ ಕೈತೋಟ ನಿರ್ಮಾಣಕ್ಕೆ ಆದ್ಯತೆ ನೀಡಿ ಕ್ರಮ ಕೈಗೊಳ್ಳಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ, ಜಿಲ್ಲಾಡಳಿತ ಭವನದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಸಂಗ್ರಹ ಹಾಗೂ ಪ್ರತಿ ಅಂಗನವಾಡಿ ಮಕ್ಕಳು ಶಾಲೆಗೆ ದಾಖಲಾಗಿರುವ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಂಗನವಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಲಸಿಕಾ ಕಾರ್ಯಕ್ರಮಗಳು ತಲುಪಿವೆಯೇ ಎಂಬುದರ ಖಾತ್ರಿಗಾಗಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

‘ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ಅವಶ್ಯವಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಕ್ಕಾಗಿ ಜಿಲ್ಲಾಧಿಕಾರಿ ಅವರಿಗೆ ಪ್ರಸ್ತಾವ ಸಲ್ಲಿಸಿ ಸ್ಥಳ ಮಂಜೂರು ಮಾಡಿಸಿಕೊಳ್ಳಬೇಕು’ ಎಂದು ಸೂಚಿಸಿದರು.

‘ಸಕಾಲದಲ್ಲಿ ಮಳೆಯಾಗದ ಕಾರಣ ಜಿಲ್ಲೆಯಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಉತ್ತೇಜಿಸಲು ತೋಟಗಾರಿಕೆ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದು ತೋಟಗಾರಿಕೆ ಉಪನಿರ್ದೇಶಕರಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎಸ್. ಕರೀಗೌಡ, ಜಿ.ಪಂ. ಮುಖ್ಯ ನಿರ್ವಹಣಾಧಿಕಾರಿ ಆರ್. ಲತಾ, ಉಪಕಾರ್ಯದರ್ಶಿ ಕರಿಯಪ್ಪ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT